ಭಾಲ್ಕಿ: ಬೀದರ್ ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ನಿರೀಕ್ಷೆಯಂತೆ ನೂತನ, ಯುವ ಸಂಸದ ಸಾಗರ ಖಂಡ್ರೆ ಅವರು ಕೆಲಸ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತ ಪಡಿಸಿದರು.
ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಬುಧವಾರ ಆಯೋಜಿಸಿದ್ದ ನೂತನ ಸಂಸದ ಸಾಗರ ಖಂಡ್ರೆ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪೂಜ್ಯರ, ಜನರ ಆಶೀರ್ವಾದ, ಹಿರಿಯರ ಹಾರೈಕೆಯಿಂದ ಸಾಗರ ಖಂಡ್ರೆ ಅವರು ಸಂಸದರಾಗಿ ಆಯ್ಕೆ ಆಗಿದ್ದಾರೆ. ಅವರು ಮುಂದಿನ ಐದು ವರ್ಷ ಕೇಂದ್ರದಲ್ಲಿ ಜಿಲ್ಲೆಯ ಜನರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ ಎಂದು ಭರವಸೆ ನೀಡಿದರು.
ಸನ್ಮಾನ ಸ್ವೀಕರಿಸಿದ ನೂತನ ಸಂಸದ ಸಾಗರ ಖಂಡ್ರೆ ಮಾತನಾಡಿ, ಪೂಜ್ಯರು ಮತ್ತು ಮತದಾರರ ಆಶೀರ್ವಾದದಿಂದ ಸಂಸದನಾಗಿ ಆಯ್ಕೆಯಾಗಿದ್ದೇನೆ. ನಮ್ಮ ತಂದೆಯವರ ಮಾರ್ಗದರ್ಶನದಲ್ಲಿ ಜನರಿಗೆ ಒಳ್ಳೆಯ ಸೇವೆ ನೀಡುವುದಾಗಿ ಭರವಸೆ ನೀಡಿದರು.
ಸಾನ್ನಿಧ್ಯ ವಹಿಸಿದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಖಂಡ್ರೆ ಮನೆತನ ಸಂಸ್ಕಾರಯುತ ಮನೆತನವಾಗಿದೆ. ಹೀಗಾಗಿ ಈ ಮನೆತನದ ಮೂರನೇ ತಲೆಮಾರಿನ ಸಾಗರ ಖಂಡ್ರೆ ಅವರು ಉತ್ತಮ ಸಂಸ್ಕಾರ, ಚಾರಿತ್ರ್ಯ ಮೈಗೂಡಿಸಿಕೊಂಡಿರುವ ಪರಿಣಾಮ ಇಂದು ಸಂಸದರಾಗಿ ಆಯ್ಕೆ ಆಗಿದ್ದಾರೆ. ಅವರು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಉತ್ತರೋತ್ತರವಾಗಿ ಬೆಳೆಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ.ಗೀತಾ ಈಶ್ವರ ಖಂಡ್ರೆ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ಪ್ರಥಮ ದರ್ಜೆ ಗುತ್ತಿಗೆದಾರ ಸಂಗಮೇಶ ಹುಣಜೆ ಮದಕಟ್ಟಿ, ರವಿ ಬೋರವೆಲ್ಸ್ ಮಾಲೀಕ ರವೀಂದ್ರ ಚಿಡಗುಪ್ಪೆ, ಗುತ್ತಿಗೆದಾರ ರಾಜಕುಮಾರ ಬಿರಾದಾರ್ ಸೇರಿದಂತೆ ಹಲವರು ಇದ್ದರು. ಬಾಬು ಬೆಲ್ದಾಳ ನಿರೂಪಿಸಿ, ವಂದಿಸಿದರು.

