ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ವಿಪಕ್ಷಗಳು ಕಿಡಿಕಾರಿ ಸದನದಲ್ಲಿ ಗದ್ದಲ ಸೃಷ್ಟಿಸಿವೆ.
ಮೊದಲು ವಿಧಾನ ಪರಿಷತ್ನಲ್ಲಿ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ವಿಷಯ ಪ್ರಸ್ತಾಪಿಸಿದರು. ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪೂಜಾರಿ, ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕೋಟಾ ಮಾತಿಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದರು. ಈ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ತಿಳಿಸಿದರು.
ಇದಕ್ಕೆ ಮತ್ತೆ ತಿರುಗೇಟು ಕೊಟ್ಟ ಕೋಟಾ, ಇವತ್ತು ಪಾಕಿಸ್ತಾನ ಪರ ಘೋಷಣೆ ಕೂಗ್ತಾರೆ. ನಾಳೆ ವಿಧಾನಸೌಧಕ್ಕೆ ಬಾಂಬ್ ಹಾಕ್ತಾರೆ. ಅದನ್ನೂ ಸಮರ್ಥಿಸಿಕೊಳ್ಳುತ್ತೀರಾ ಎಂದು ‘ಕೈ’ ನಾಯಕರ ವಿರುದ್ಧ ಹರಿಹಾಯ್ದರು.
ಕಾಂಗ್ರೆಸ್ ಹಾಗೂ ವಿಪಕ್ಷಗಳ ಗದ್ದಲದಿಂದಾಗಿ ಪರಿಷತ್ ಕಲಾಪವನ್ನು ಮುಂದೂಡಲಾಯಿತು. ಮತ್ತೆ ಕಲಾಪ ಆರಂಭವಾದಾಗ ‘ದೇಶದ್ರೋಹಿ ಕಾಂಗ್ರೆಸ್’ ಎಂದು ಬಿಜೆಪಿ ಸದಸ್ಯರು ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರು. ಭಾರತ್ ಮಾತಾ ಕೀ ಜೈ ಘೋಷಣೆ ಜೊತೆಗೆ, ಕಾಂಗ್ರೆಸ್ ಸರ್ಕಾರ ವಜಾ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.