ಚಾಮರಾಜನಗರ: ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ಗೆ ಫೇರಾವ್ ಹಾಕಲು ಮುಂದಾಗಿದ್ದ ರೈತ ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು.
ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದು ಧ್ವಜಾರೋಹಣಕ್ಕೆ ಆಗಮಿಸುವ ಸಂದರ್ಭದಲ್ಲಿ ಸಚಿವರಿಗೆ ಫೇರಾವ್ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಿರ್ಧರಿಸಿದ್ದರು. ಇದನ್ನು ಅರಿತ ಪೊಲೀಸರು ಮಾತನಾಡಲು ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿ ಸಭೆ ನಡೆಸಲು ಜಿಲ್ಲಾಡಳಿತ ಭವನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ರೈತರಿಂದ ತೊಂದರೆಯಾಗಬಾರದೆಂದು ಮನಗಂಡು ಚಾಮರಾಜನಗರಕ್ಕೆ ಆಗಮಿಸಿದ ಹೊನ್ನೂರು ಬಸವಣ್ಣ ಹಾಗೂ ಸಂಘದ ಇತರೆ ಪದಾಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ಕಾಗಲವಾಡಿ ಪೊಲೀಸ್ ಉಪಠಾಣೆಗೆ ಕರೆದೊಯ್ದರು.
ಈ ವೇಳೆ ಪೊಲೀಸರ ವಿರುದ್ಧ ರೈತ ಸಂಘದ ಮುಖಂಡರು ಆಕ್ರೋಶ ಹೊರ ಹಾಕಿದರು. ಕೆಲ ಕಾಲ ಕಾಗಲವಾಡಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಆ ನಂತರ ಬಿಡುಗಡೆ ಮಾಡಿದರು. ರೈತ ಸಂಘದ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವರು ಸಭೆ ನಡೆಸಿದ ಜಿಲ್ಲಾಡಳಿತ ಭವನದ ಮುಖ್ಯಗೇಟ್ ಹಾಗೂ ಜಿಲ್ಲಾಡಳಿತ ಭವನದಲ್ಲಿ ಪೊಲೀಸ್ ಅಲ್ಲದೇ ಸಚಿವರೊಂದಿಗೆ ಬಿಗಿ ಭದ್ರತೆ ಮಾಡಲಾಗಿತ್ತು.