ಚಾಮರಾಜನಗರ : ಸರ್ಕಾರದಿಂದ ನೀಡುವ ಪಡಿತರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವಾಹನವನ್ನು ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆನಂದಮೂರ್ತಿ ನೇತೃತ್ವದ ತಂಡ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ನಿವಾಸಿ ಸೈಯದ್ ನಯೀಮ್ ಎಂಬಾತನೆ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ಸ್ಪೆಕ್ಟರ್ ಆನಂದಮೂರ್ತಿ ಅವರು ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದತ್ತ ಸಾಗುತ್ತಿದ್ದ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನವನ್ನು ಹನೂರು ಪಟ್ಟಣದ ಬಳಿ ತಪಾಸಣೆ ನಡೆಸಿದಾಗ, ವಾಹನದಲ್ಲಿ ಬಿಪಿಎಲ್ ಪಡಿತರ ಅಕ್ಕಿ ತುಂಬಿರೋದು ಬೆಳಕಿಗೆ ಬಂದಿದ ತಕ್ಷಣವೆ ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.

