ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಾಕಾನೆ ಮೂಲಕ ಕೂಂಬಿಂಗ್ ಆರಂಭಿಸಿದೆ.

ಮದ್ದಯ್ಯನಹುಂಡಿ, ಬೇರಂಬಾಡಿ, ಚೆನ್ನಮಲ್ಲಿಪುರ ವ್ಯಾಪ್ತಿಯಲ್ಲಿ ಎಸ್ ಟಿಪಿಎಫ್ ಮದ್ದೂರು ವಲಯ ಸಿಬ್ಬಂದಿ ರೋಹಿತ್ ಆನೆಯನ್ನು ಬಳಕೆ ಮಾಡಿಕೊಂಡು ಹುಲಿ ಸೆರೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಜೊತೆಗೆ ಡ್ರೋನ್ ಕೂಡ ಬಳಕೆ ಮಾಡಲಾಗಿದೆ.  ಮದ್ದಯ್ಯನಹುಂಡಿ ಕೆರೆ ಬಳಿ ರೈತರಿಗೆ ಹುಲಿ ಕಾಣಿಸಿಕೊಂಡ ಹಿನ್ನೆಲೆ ಅರಣ್ಯ ಇಲಾಖೆಗೆ ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು. ಬಳಿಕ ಎಸಿಎಫ್ ಸುರೇಶ್ ನೇತೃತ್ವದಲ್ಲಿ ಕೂಂಬಿಂಗ್ ಆರಂಭಿಸಲಾಗಿದೆ.

ಚೆನ್ನಮಲ್ಲಿಪುರ, ಬೇರಂಬಾಡಿ ಭಾಗದಲ್ಲಿ ಹುಲಿಯ ಹೆಜ್ಜೆ ಗುರುತು ಕಂಡುಬಂದಿದ್ದು, ಇದನ್ನು ಆಧರಿಸಿ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ. ವಾಸೀಂ ಮಿರ್ಜಾ ಹಾಗೂ ಡಿಆರ್ ಎಫ್ ರವಿ, ಗುಂಡ್ಲುಪೇಟೆ ಡಿಆರ್ ಎಫ್ ಓ ಶಿವಕುಮಾರ್ , ಎಸ್ ಟಿಪಿಎಫ್ ಆರ್ ಎಫ್ ಓ ವೈರಮುಡಿ ಸೇರಿದಂತೆ ಒಟ್ಟು 62 ಮಂದಿ ಅರಣ್ಯ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದಾರೆ.