ಚಾಮರಾಜನಗರ: ಕರ್ನಾಟಕ ಸೇನಾಪಡೆ ವತಿಯಿಂದ ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡುತ್ತಿರುವುದರ ವಿರುದ್ಧ ಚಾಮರಾಜನಗರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಚಾಮರಾಜನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಮೈಕ್ರೋ ಫೈನಾನ್ಸ್ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಮೈಕ್ರೋಫೈನಾನ್ಸ್ ಸಂಸ್ಥೆಗಳು ನಾಯಿಕೊಡೆಯಂತೆ ಹುಟ್ಟಿಕೊಂಡಿದ್ದು, ಜನರ ಹಣವನ್ನು ಸುಲಿಗೆ ಮಾಡುತ್ತಿವೆ. 10 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಜನರಿಗೆ ಅಮಿಷವೊಡ್ಡಿ ಸಾಲ ನೀಡಿ, ಸಾಲಮರುಪಾವತಿ ವಿಳಂಬ ಮಾಡಿದರೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಕಿರುಕುಳ ನೀಡುತ್ತಿವೆ. ಫೈನಾನ್ಸ್ ಗಳ ಕಿರುಕುಳದಿಂದ ರಾಜ್ಯಾದ್ಯಂತ ಅನೇಕ ಕುಟುಂಬಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿರಾರು ಕುಟುಂಬಗಳು ಊರು ಬಿಟ್ಟಿದ್ದಾರೆ. ಅನೇಕ ಕುಟುಂಬಗಳು ತೊಂದರೆ ಸಿಲುಕಿವೆ. ಮುಖ್ಯಮಂತ್ರಿ, ಜಿಲ್ಲಾಧಿಕಾರಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗಾಗಿ ಮೈಕ್ರೋಫೈನಾನ್ಸ್ ನಿಂದ ಸಾಲ ಪಡೆದಿರುವ ಜನತೆ ಧೈರ್ಯದಿಂದ ಇರಿ ನಿಮ್ಮೊಂದಿಗೆ ಜಿಲ್ಲಾಡಳಿತ, ಸರ್ಕಾರ, ಕನ್ನಡ ಸಂಘಟನೆಗಳಿವೆ. ಯಾರು ಊರು ಬಿಡಬೇಡಿ, ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಧೈರ್ಯ ಹೇಳಿದರು.
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ರದ್ದುಪಡಿಸಿ, ಬ್ಯಾಂಕ್ ಮೂಲಕ ಸಾಲಸೌಲಭ್ಯ ಕೊಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನಿಜಧ್ವನಿಗೋವಿಂದ, ಪಣ್ಯದಹುಂಡಿ ರಾಜು, ನಂಜುಂಡಶೆಟ್ಟಿ, ವೀರಭದ್ರ, ಆಟೋನಾಗೇಶ್, ಶಿವಣ್ಣ, ಸಿದ್ದರಾಜು, ರಾಚಪ್ಪ ಭಾಗವಹಿಸಿದ್ದರು.