ಚಾಮರಾಜನಗರ: ಪ್ರವಾಸಿಗರು ಕಾಡಿನೊಳಗೆ ಅತಿಕ್ರಮ ಪ್ರವೇಶ ಮಾಡಿದ್ದಲ್ಲದೆ ಪಾರ್ಟಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಅಜ್ಜೀಪುರ ಬಳಿಯ ಮಲೆಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಇರುವ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಸುತ್ತಮುತ್ತಲು ಪ್ರವಾಸ ಕೈಗೊಳ್ಳುವವರು ಅರಣ್ಯ ಇಲಾಖೆಯ ಸಿಬ್ಬಂದಿಗಳ ಕಣ್ತಪ್ಪಿಸಿ ಕಾಡಿನೊಳಗೆ ಹೊಕ್ಕು ಅಡಿಗೆ ಮಾಡಿ ಪಾರ್ಟಿ ಮಾಡುವುದು ಬೆಳಕಿಗೆ ಬಂದರೂ ಸಹ ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಕಂಡು ಕಾಣದಂತೆ ಇರುವುದು ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಪ್ರಸ್ತುತ ಕಾಡಿನಲ್ಲಿ ಆನೆಗಳ ಗಣತಿ ಕಾರ್ಯ ನಡೆಯುತ್ತಿದ್ದು, ಅನಿರೀಕ್ಷಿತ ವಾಗಿ ಕಾಡು ಪ್ರಾಣಿಗಳು ದಾಳಿ ನಡೆಸಿದರೆ ಅನಾಹುತ ಸಂಭವಿಸಲಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳದ ಸಾರ್ವಜನಿಕರು ಮೋಜು ಮಸ್ತಿಗಾಗಿ ರಸ್ತೆ ಬದಿ ವಾಹನ ನಿಲ್ಲಿಸಿ ಕಾಡಿನೊಳಗೆ ಹೋಗುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಜಾಣಕುರುಡು ಪ್ರದರ್ಶನ ಮಾಡುತ್ತಿದ್ದಾರೆ.