ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಪ್ರಕರಣವನ್ನು ಖಂಡಿಸಿ ಕಾಫಿನಾಡಲ್ಲಿ ಜನಾಕ್ರೋಶ ತೀವ್ರಗೊಂಡಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಸೋಮವಾರ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್ ಮಾಡಲಾಯಿತು.

ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಖಂಡಿಸಿ ಬಂದ್‌ಗೆ ಕರೆ ನೀಡಲಾಗಿತ್ತು. ಶೃಂಗೇರಿ ಕ್ಷೇತ್ರದ ಶೃಂಗೇರಿ, ಎನ್.ಆರ್. ಪುರ, ಕೊಪ್ಪ ತಾಲೂಕು, ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ವ್ಯಾಪ್ತಿಯಲ್ಲಿ ಬಂದ್ ಮಾಡಲಾಗಿದೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಆಗಿವೆ. ರೈತ ಸಂಘಟನೆಗಳು ಬೆಳಗ್ಗೆ 8 ರಿಂದ ಸಂಜೆ 5ರ ತನಕ ಬಂದ್‌ಗೆ ಕರೆ ನೀಡಿದ್ದವು. ನಾಗರಿಕ ಹಿತ ರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋಚಾಲಕರು, ಮಾಲೀಕರ ಸಂಘ, ಬಿಜೆಪಿಯಿಂದ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ ಎಂಬ ಮಾಹಿತಿ ತಿಳಿದು ಬಂದಿದೆ.