ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಬಗ್ಗೆ ಹೈಕೋರ್ಟ್ ನಲ್ಲಿ ಕಾವೇರಿದ ಕಾನೂನು ಸಮರ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ “ಟೆಂಪಲ್ ರನ್’ ಪ್ರಾರಂಭಿಸಿದ್ದು ದೇವರಿಗೆ ಮೊರೆ ಹೋಗಿದ್ದಾರೆ.
ಶುಕ್ರವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ದೇವರ ಗುಡ್ಡದಲ್ಲಿ ಮಾಲತೇಶ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದ ಮುಖ್ಯಮಂತ್ರಿಗಳು ರವಿವಾರ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ರವಿವಾರ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ತೆರಳಲಿರುವ ಮುಖ್ಯಮಂತ್ರಿಗಳು ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಆ ಬಳಿಕ ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

