Bengaluru 27°C
Ad

ಚನ್ನಗಿರಿ ಆದಿಲ್ ಸಾವು ಪ್ರಕರಣ ಮತ್ತು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟದ ತನಿಖೆಯನ್ನು ಸಿಐಡಿಗೆ ವರ್ಗಾವಣೆ

ಚನ್ನಗಿರಿ ಆದಿಲ್ ಸಾವು ಪ್ರಕರಣ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ: ಚನ್ನಗಿರಿ ಆದಿಲ್ ಸಾವು ಪ್ರಕರಣ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದುವರೆಗೂ ಘಟನೆಗೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ. ಅವರೆಲ್ಲಾ ನ್ಯಾಯಾಂಗ ಬಂಧನದಲ್ಲಿದ್ದು, ಬಂಧಿತರ ಮೇಲೆ ಯಾವುದೇ ಹಳೇ ಕೇಸ್‌ಗಳಿಲ್ಲ. ಗುಂಪಿನಲ್ಲಿದ್ದ ಕೆಲ ಯುವಕರು ಠಾಣೆ ಮೇಲೆ ಕಲ್ಲೆಸೆದಿದ್ದಾರೆ. ಚನ್ನಗಿರಿ ಟೌನ್ ಮತ್ತು ತಾಲೂಕಿನ ಹೊನ್ನೇಬಾಗಿ ನಲ್ಲೂರು ಸೇರಿ ವಿವಿಧ ಹಳ್ಳಿಗಳಿಂದ ಬಂದ ಯುವಕರು ಗುಂಪಿನಲ್ಲಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರ ಮೇಲೆ ಐಪಿಸಿ 353 ಮತ್ತು 307 ಅನ್ವಯ ಪ್ರಕರಣ ದಾಖಲಾಗಿದೆ. ಆದಿಲ್‌ ಮರಣೋತ್ತರ ಪರೀಕ್ಷೆ ನಡೆದಿದ್ದು, ಇನ್ನಷ್ಟೇ ವರದಿ‌ ನಮ್ಮ ಕೈಸೇರಬೇಕಿದೆ. ಇನ್ಮೆರೆಡು ದಿನಗಳಲ್ಲಿ ವರದಿ ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಯುವಕನ ಲಾಕಪ್‌ ಡೆತ್‌ ಆಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯ ಎದುರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಈ ಸಂಬಂಧ 25 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ವಶದಲ್ಲಿದ್ದ ಆದಿಲ್ (32) ಎಂಬ ವ್ಯಕ್ತಿ ಸಾವಿಗೀಡಾದ ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದರು.

ಈ ವೇಳೆ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. 200ಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ದಾಳಿಯಾದ ಹಿನ್ನೆಲೆ ಚನ್ನಗಿರಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ.

 

 

Ad
Ad
Nk Channel Final 21 09 2023
Ad