ಹುಬ್ಬಳ್ಳಿ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ.
ಕಳೆದೆರೆಡು ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಿದ ವರದಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸಚಿವರು ಟ್ವೀಟ್ ಮಾಡಿದ್ದಾರೆ. ರೈತರ ಹಿತರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಕಷ್ಟು ಕ್ರಮ-ಉಪಕ್ರಮಗಳನ್ನು ಕೈಗೊಂಡಿದೆ. ಹೀಗಿದ್ದರೂ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಅಧಿಕವಾಗಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾತೆತ್ತಿದರೆ ತಾವು ರೈತಪರ ಎನ್ನುವ ಸಿಎಂ ಸಿದ್ದರಾಮಯ್ಯ ಸರ್ಕಾರ, ರೈತರ ಕುರಿತು ಎಳ್ಳಷ್ಟೂ ಕಾಳಜಿ ತೋರಿಸಿಲ್ಲ ಎಂದು ಆರೋಪಿಸಿರುವ ಸಚಿವರು, ಸೂಕ್ತ ಬೆಳೆ ವಿಮೆ ಹಾಗೂ ಸಮರ್ಪಕ ಬೆಳೆ ಪರಿಹಾರವನ್ನು ರೈತರು ಇದೂವರೆಗೂ ಕಂಡಿಲ್ಲ. ಹೀಗಾಗಿ ರೈತ ಸಮೂಹ ಕಂಗೆಟ್ಟು ಕುಳಿತಿದೆ. ಅಲ್ಲದೇ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದರು ಸರ್ಕಾರ ಕಿವುಡುತನ ಪ್ರದರ್ಶಿಸುತ್ತಿದೆ ಎಂದು ಪ್ರಲ್ಹಾದ್ ಜೋಶಿ ಹರಿಹಾಯ್ದಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ತಾವು ಘೋಷಿಸಿದ ಬಿಟ್ಟಿ ಭಾಗ್ಯಗಳನ್ನು ಪೂರೈಸಲು ಹರಸಾಹಸ ಪಡುತ್ತಿದೆ. ಹೀಗಿರುವಾಗ ರೈತರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಬಲಹೀನವಾಗಿಬಿಟ್ಟಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ದೂರಿದ್ದಾರೆ.

