ಹುಬ್ಬಳ್ಳಿ: ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿಯೂ ಉತ್ತರಾಖಂಡ ಸಹಸ್ತ್ರ ತಾಲ್ ಶಿಖರದ ಚಾರಣಕ್ಕೆ ತೆರಳಿದ್ದ ವೇಳೆ ಹವಾಮಾನ ವೈಪರೀತ್ಯದಿಂದ ದುರಂತ ಅಂತ್ಯ ಕಂಡಿದ್ದಾರೆ.

ಚಾರಣಕ್ಕೆ ಹೋದ 22 ಮಂದಿಯ ಪೈಕಿ ಹುಬ್ಬಳ್ಳಿ ಮೂಲದ ವಿನಾಯಕ ಮುಂಗುರವಾಡಿ ಹಾಗೂ ಸುಜಾತಾ ಮುಂಗುರವಾಡಿ ಕೊನೆಯುಸಿರೆಳೆದಿದ್ದಾರೆ. ಅಕ್ಟೋಬ‌ರ್ 3ರಂದೇ (ಇಸವಿ ಬೇರೆ) ಇಬ್ಬರ ಜನನವಾಗಿತ್ತು. ಅದೇ ತರನಾಗಿ ಜೂನ್ 4ರಂದು ಒಟ್ಟಿಗೆ ಮೃತಪಟ್ಟಿರುವುದು ಕ್ರೂರ ವಿಧಿಯಾಟವೇ ಸರಿ.

ಕರ್ನಾಟಕದಿಂದ ತೆರಳಿದ್ದ 22 ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಸಹಸ್ತ್ರ ತಾಲ್ ಮಯಳಿ ಪ್ರದೇಶಕ್ಕೆ ತೆರಳಿ, ಅಲ್ಲಿಂದ ಚಾರಣ ಆರಂಭಿಸಿತ್ತು. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಮುಂದಾಗಿದೆ.

ಆಗ ಮಾರ್ಗಮಧ್ಯೆ ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟು, ಎಲ್ಲ ಚಾರಣಿಗರು ಅಪಾಯಕ್ಕೆ ಸಿಲುಕಿದ್ದಾರೆ. ಇದರಲ್ಲಿ 9 ಚಾರಣಿಗರು ಮೃತಪಟ್ಟಿದ್ದು, 13 ಜನರನ್ನು ರಕ್ಷಣೆ ಮಾಡಲಾಗಿದೆ. ಇದುವರೆಗೆ ಐವರ ಮೃತದೇಹ ಮಾತ್ರ ಸಿಕ್ಕಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.