ಯಾದಗಿರಿ: ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದಿದೆ.

ಶ್ರೀನಿವಾಸ ಎಂಬವರಿಗೆ ಸೇರಿದ ಹೊಲ್‌ಸೇಲ್ ಕಿರಾಣಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂದಾಜು ರೂ. 40 ಲಕ್ಷಕ್ಕೂ ಅಧಿಕ ಮೌಲ್ಯದ ದಿನಸಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಂಗಡಿಯೊಳಗೆ ಸಂಗ್ರಹಿಸಿಡಲಾಗಿದ್ದ ಎಲ್ಲಾ ಸಾಮಾಗ್ರಿಗಳು ಕೆಲವೇ ನಿಮಿಷಗಳಲ್ಲಿ ಬೆಂಕಿಗಾಹುತಿಯಾಗಿದೆ.

ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರು ಎನ್ನಲಾಗಿದೆ. ಟ್ಯಾಂಕರ್‌ನಿಂದ ನೀರು ತರಿಸಿ ಬಕೆಟ್‌ಗಳ ಮೂಲಕ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ, ಬೆಂಕಿಯ ತೀವ್ರತೆ ಹೆಚ್ಚಾಗಿತ್ತು. ಯಾದಗಿರಿ ನಗರದಿಂದ ಅಗ್ನಿಶಾಮಕ ದಳದ ವಾಹನ ಆಗಮಿಸುವ ವೇಳೆಗೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು.

ಗುರುಮಠಕಲ್ ಪಟ್ಟಣದಲ್ಲಿ ಅಗ್ನಿಶಾಮಕ ದಳದ ಠಾಣೆ ಇಲ್ಲದಿರುವುದು ಈ ಅನಾಹುತಕ್ಕೆ ಕಾರಣವಾಗಿದೆ. ಪದೇ ಪದೇ ಅಗ್ನಿ ಅನಾಹುತಗಳು ನಡೆಯುತ್ತಿದ್ದರೂ, ಸ್ಥಳೀಯವಾಗಿ ಅಗ್ನಿಶಾಮಕ ಠಾಣೆ ಸ್ಥಾಪನೆಯಾಗದಿರುವುದಕ್ಕೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವರು ಕೂಡಲೇ ಗುರುಮಠಕಲ್ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಮಂಜೂರಾತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಘಟನೆ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.