ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇದೇ ಜೂನ್ 14ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಕೆ.ಕೆ.ಆರ್.ಡಿ.ಬಿ.ಅಧ್ಯಕ್ಷ ಡಾ. ಅಜಯ್ ಸಿಂಗ್ ತಿಳಿಸಿದ್ದಾರೆ.

ಇಲ್ಲಿನ ಕೆ.ಕೆ.ಆರ್.ಡಿ.ಬಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ 2024-25ನೇ ಸಾಲಿಗೆ 5,000 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಮತ್ತು ಸದರಿ ಅನುದಾನ ಇದೇ ವರ್ಷದಲ್ಲಿ ಖರ್ಚು ಮಾಡುವ ಸಂಬಂಧ ಯೋಜನಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಕ.ಕ. ಭಾಗದ ಸಚಿವರನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಸಿಎಂ ಸಭೆ ನಂತರ ಇದೇ ಜೂನ್ 28ಕ್ಕೆ ಮಂಡಳಿ ಸಭೆ ನಡೆಸಲು ನಿರ್ಧರಿಸಿದ್ದು, 15 ದಿನದೊಳಗೆ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಪ್ರಸಕ್ತ ಸಾಲಿನ ಕೆಲಸಗಳು ಆರಂಭಿಸಲಾಗುವುದು ಎಂದರು. ಕಳೆದ ವರ್ಷ ನಮ್ಮ ಸರ್ಕಾರ ಈ ಭಾಗಕ್ಕೆ 5 ಸಾವಿರ ಕೋಟಿ ರೂ. ಅನುದಾನ ಘೋಷಿಸಿ 3 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಿದ್ದು, ಅದರಂತೆ ಪ್ರದೇಶದಲ್ಲಿ ರಸ್ತೆ, ಚರಂಡಿ ನಿರ್ಮಾಣ, ಮೂಲಸೌಕರ್ಯ ಕೆಲಸ ಭರದಿಂದ ಸಾಗಿದೆ. ಇದರೊಂದಿಗೆ ಪ್ರದೇಶದಲ್ಲಿ ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿಕ್ರಾಂತಿಕಾರಿ ಬದಲಾವಣೆಗೆ ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.

ನೀಟ್ ಪರೀಕ್ಷೆ ಅವ್ಯವಹಾರ ಕುರಿತಂತೆ ಪ್ರತಿಕ್ರಿಯಿಸಿದ ಡಾ.ಅಜಯ್ ಸಿಂಗ್, ಲೋಕಸಭಾ ಚುನಾವಣಾ ಫಲಿತಾಂಶ ದಿನವೇ ಪರೀಕ್ಷೆ ರಿಸಲ್ಟ್ ಘೋಷಣೆ ಮಾಡಿದ್ದು, ಹಲವು ಅವಮಾನಕ್ಕೆ ಎಡೆಮಾಡಿಕೊಟ್ಟಿದೆ. ಎಲ್ಲೆಡೆ ಅವ್ಯವಹಾರ ಕೇಳಿ ಬರುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ‌ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟವಾಡುವುದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ‌ ಎಂದು ತಿಳಿಸಿದರು.