ಕಲಬುರಗಿ: ಸುಮಾರು 64 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಪಿಎಂ ಅಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮತ್ತು ಅಭಿವೃದ್ಧಿ ಮಿಷನ್ ಯೋಜನೆಗೆ ಸೋಮವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು.
ವಾರಣಾಸಿಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದಿಂದ ಹಮ್ಮಿಕೊಳ್ಳಲಾಗಿದ ಕಾರ್ಯಕ್ರಮಕ್ಕೆ ಕಲಬುರಗಿಯ ಜಿಮ್ಸ್ ಕಾಲೇಜಿನ ಕೇಂದ್ರ ಗ್ರಂಥಾಲಯದಲ್ಲಿ ವರ್ಚ್ಯುವಲ್ ಮೂಲಕ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಅವರು ಭಾಗವಹಿಸಿದ ಬಳಿಕ ಅವರು ಮಾತನಾಡಿದರು.
ನವ ಭಾರತ ನಿರ್ಮಾಣಕ್ಕಾಗಿ ಹಗಲು ರಾತ್ರಿ ಶ್ರಮವಹಿಸಬೇಕು. ಪ್ರಧಾನಿ ಮೋದಿಯವರ ನಿರ್ದೇಶನದಂತೆ ನಾವೆಲ್ಲರೂ ನಡೆಯೋಣ. ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಇದೇ ವೇಳೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಆರ್. ವೆಂಕಟೇಶ್ ಕುಮಾರ್, ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದೀಲಿಷ್ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ್, ಜಿಮ್ಸ್ ಕಾಲೇಜಿನ ನಿರ್ದೇಶಕರಾದ ಡಾ. ಕವಿತಾ ಪಾಟೀಲ್, ಜಿಮ್ಸ್ ಕಾಲೇಜಿನ ಅಧೀಕ್ಷಕ ಶಫಿಯುದ್ದಿನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಂಬರಾಯ ಎಸ್. ರುದ್ರವಾಡಿ ಸೇರಿದಂತೆ ಅರೋಗ್ಯ ಇಲಾಖೆಯ ಹಾಗೂ ಜಿಮ್ಸ್ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.