ಕಲಬುರಗಿ, -ಬುಧವಾರ ಬೀದರ್ ನ ಪರೀಕ್ಷಾ ಕೇಂದ್ರಗಳಿಗೆ ದಿಢೀರ ಭೇಟಿ ನೀಡಿದ ಗುವಿವಿ ಕುಲಪತಿ ಪ್ರೊ.ದಯಾನಂದ ಅಗಸರ ಅವರು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಹಾಗೂ ಪರೀಕ್ಷಾ ಅಕ್ರಮ ನಡೆಯುತ್ತಿರುವುದನ್ನು ಗಮನಿಸಿ, ಎಂ.ಎಸ್. ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜಮೆಂಟ್ ಕಾಲೇಜಿನ (ಕಾಲೇಜು ಕೋಡ್-ಬಿ574) ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಿದರು. ರದ್ದುಪಡಿಸಿದ ಸದರಿ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ದಿನಾಂಕ 13-08-2021 ರಿಂದ ಮುಂದಿನ ಎಲ್ಲಾ ಪರೀಕ್ಷೆಗಳನ್ನು ಬರೆಯಲು ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿರುವ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹೊಸ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಯಿತು. ಪರೀಕ್ಷಾ ಕೇಂದ್ರಕ್ಕೆ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರನ್ನು ಆಂತರಿಕ ಹಿರಿಯ ಮೇಲ್ವಿಚಾರಕರು ಹಾಗೂ ಬಿವಿಬಿ ಕಾಲೇಜಿನ ಪ್ರಾಧ್ಯಾಪಕರೊಬ್ಬರನ್ನು ಬಾಹ್ಯ ಹಿರಿಯ ಮೇಲ್ವಿಚಾರಕರಾಗಿ ನೇಮಕ ಮಾಡುವಂತೆ ಸ್ಥಳದಲ್ಲಿಯೇ ಆದೇಶ ನೀಡಿದರು.
ಅದೇರೀತಿ, ನಗರದ ಕವಿರತ್ನ ಕಾಳಿದಾಸ ಪದವಿ ಮಹಾವಿದ್ಯಾಲಯದಲ್ಲಿಯೂ ಸಹ ಪರೀಕ್ಷಾ ಅಕ್ರಮಗಳು ನಡೆಯುತ್ತಿರುವುದನ್ನು ಗಮನಿಸಿ ಎರಡೂ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರಿಗೆ ಹಾಗೂ ಬಾಹ್ಯ ಹಿರಿಯ ಮೇಲ್ವಿಚಾರಕರಿಗೆ ಎಚ್ಚರಿಕೆ ನೀಡಿ, ಲಿಖಿತ ವಿವರಣೆ ನೀಡಲು ಕುಲಪತಿಗಳು ಸೂಚಿಸಿದರು.