ಬಳ್ಳಾರಿ: ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಉನ್ನತ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ, ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮತ್ತು ಕಂದಾಯ ಸಚಿವ ಆರ್.ಅಶೋಕ್ ಮತ್ತು ಇತರ ಸಚಿವರು ಶುಕ್ರವಾರ ಹಂಪಿಗೆ ಭೇಟಿ ನೀಡಿ ಪವಿತ್ರ ಮಣ್ಣನ್ನು ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ, ಸಂಸದ ವೈ.ದೇವೇಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಸಚಿವರು ಹಂಪಿ ವಿರೂಪಾಕ್ಷೇಶ್ವರ ಮತ್ತು ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಣ್ಣನ್ನು ಸಂಗ್ರಹಿಸಿದರು. ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣದೇವರಾಯನ ಹೆಸರಿನಲ್ಲಿ ಅವರು ಅರ್ಚನೆ ಮಾಡಿದರು.
ಇದಕ್ಕೂ ಮುನ್ನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಚಿವರನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. ಅಲ್ಲಿಂದ ಅವರು ಬೈಕ್ ಜಾಥಾವನ್ನು ಹಂಪಿಗೆ ಕೊಂಡೊಯ್ದರು. ನಂತರ ಸಚಿವರು ವಿವಿಧ ಕಲಾತಂಡಗಳೊಂದಿಗೆ ವಿರೂಪಾಕ್ಷ ದೇವಾಲಯದವರೆಗೆ ನಡೆದರು.