ಬೀದರ್ : ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.
ಬೀದರ್ ತಾಲ್ಲೂಕಿನ ಜನವಾಡದಲ್ಲಿ ಬುಧವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಬಡವರು ಸೇರಿದಂತೆ ಎಲ್ಲ ವರ್ಗಗಳ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ತಲುಪಿದೆ ಎಂದು ತಿಳಿಸಿದರು.
ಕೇಂದ್ರವು, ಬಡ ಹೆಣ್ಣುಮಕ್ಕಳಿಗೆ ಉಚಿತ ಗ್ಯಾಸ್ ಸಿಲಿಂಡರ್, ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ 5 ಕೆ.ಜಿ. ಉಚಿತ ಅಕ್ಕಿ, ಸ್ವಸಹಾಯ ಗುಂಪುಗಳಿಗೆ ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ, ಆಯುಷ್ಮಾನ್ ಭಾರತ ಯೋಜನೆಯಡಿ ಜನರಿಗೆ ಉಚಿತ ವೈದ್ಯಕೀಯ ಸೇವೆ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಿದೆ ಎಂದು ತಿಳಿಸಿದರು.
ದೇಶದ 80 ಕೋಟಿ ಜನ ಕೇಂದ್ರದ ವಿವಿಧ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಕೇಂದ್ರದ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಲು ವಿಕಸಿತ ಭಾರತ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಭಾರತ ಎಂದೋ ಅಭಿವೃದ್ಧಿ ಹೊಂದಬೇಕಿತ್ತು. ಆದರೆ, ಹಿಂದಿನ ಸರ್ಕಾರಗಳ ಅವಧಿಯಲ್ಲಿನ ದುರಾಡಳಿತ ಹಾಗೂ ಭ್ರಷ್ಟಾಚಾರದಿಂದ ಹೇಳಿಕೊಳ್ಳುವ ಅಭಿವೃದ್ಧಿ ಆಗಿರಲಿಲ್ಲ. 2014 ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೇಶದಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ. ಭಾರತ, ಎಲ್ಲ ರಂಗಗಳಲ್ಲೂ ಅಭಿವೃದ್ಧಿ ಹೊಂದುತ್ತಿದೆ ಎಂದು ತಿಳಿಸಿದರು.
ಉಜ್ವಲ 3.0 ಯೋಜನೆ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿದರು. ಕೇಂದ್ರ ಯೋಜನೆಗಳ ಕಿರುಚಿತ್ರ ಪ್ರದರ್ಶಿಸಲಾಯಿತು.