ಬೀದರ್: ರಾಜ್ಯ ಸರ್ಕಾರವು ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಗುರುವಾರ (ಜೂ.22) ಬೀದರ್ ಬಂದ್ ನಡೆಸಲು ನಿರ್ಧರಿಸಲಾಗಿದೆ ಎಂದು ಸಾರ್ವಜನಿಕ ಹಿತರಕ್ಷಣಾ ಸಮಿತಿ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಘೋಷಿಸಿವೆ.
ನಗರದ ಗಾಂಧಿಗಂಜ್ನ ಬಸವೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ 28 ಸಂಘ, ಸಂಸ್ಥೆಗಳ ಪ್ರಮುಖರ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಸಮಿತಿಯ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಹಾಗೂ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜೂ. 22ರಂದು ಬೆಳಿಗ್ಗೆ 6ರಿಂದ ಸಂಜೆ 5ರ ವರೆಗೆ ಬಂದ್ ನಡೆಸಲಾಗುವುದು. ಅಂಗಡಿ, ಹೋಟೆಲ್ ಸೇರಿದಂತೆ ಎಲ್ಲ ವರ್ತಕರು ಸ್ವಯಂ ಪ್ರೇರಣೆಯಿಂದ ವಹಿವಾಟು ಸ್ಥಗಿತಗೊಳಿಸಿ ಬಂದ್ಗೆ ಬೆಂಬಲಿಸಬೇಕು.
ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. ಅಂದು ಮಧ್ಯಾಹ್ನ 12ಕ್ಕೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಏಕಾಏಕಿ ಎರಡ್ಮೂರು ಪಟ್ಟು ವಿದ್ಯುತ್ ದರ ಹೆಚ್ಚಿಸಿ ಜನಸಾಮಾನ್ಯರು, ಉದ್ಯಮಿಗಳಿಗೆ ದೊಡ್ಡ ಶಾಕ್ ಕೊಟ್ಟಿದೆ. ವಿದ್ಯುತ್ ಬಿಲ್ ನೋಡಿ ಜನ ಕಂಗಾಲಾಗಿದ್ದಾರೆ. ಇದು ಅವೈಜ್ಞಾನಿಕವಾದ ನಿರ್ಧಾರ. ಪುಕ್ಕಟ್ಟೆ ಯೋಜನೆಗಳನ್ನು ಘೋಷಿಸಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ₹10 ಕೊಡುವ ಘೋಷಣೆ ಮಾಡಿ ₹50 ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಶಕ್ತಿ’ ಯೋಜನೆ ಕೂಡ ಯಾವುದೇ ಸಿದ್ಧತೆ ಇಲ್ಲದೆ ಜಾರಿಗೆ ತಂದಿದೆ. ಮಹಿಳೆಯರು ಉಚಿತ ಪ್ರಯಾಣಕ್ಕಾಗಿ ಬಸ್ಗಳಿಗೆ ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆ. ಎಲ್ಲ ಬಸ್ಗಳಲ್ಲಿ ಜನಸಂದಣಿ ಹೆಚ್ಚಾಗಿದೆ. ದೈನಂದಿನ ಕೆಲಸಕ್ಕೆ ಹೋಗುವವರಿಗೆ ಬಹಳ ಸಮಸ್ಯೆಯಾಗುತ್ತಿದೆ. ಯಾವುದೇ ಯೋಜನೆ ಜಾರಿಗೂ ಮುನ್ನ ಅದರ ಪೂರ್ವಾಪರಗಳ ಬಗ್ಗೆ ಅಧ್ಯಯನ ಮಾಡಬೇಕು. ಇಲ್ಲವಾದರೆ ಜನಸಾಮಾನ್ಯರಿಗೆ ಬಹಳ ತೊಂದರೆಯಾಗುತ್ತದೆ ಎಂದು ತಿಳಿಸಿದರು.
ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ, ಗಾಂಧಿಗಂಜ್ನ ‘ದಿ ಗ್ರೇನ್ ಅಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್’ ಅಧ್ಯಕ್ಷ ರಾಜಕುಮಾರ ಬಿರಾದಾರ, ಸಣ್ಣ ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ಶಿವರಾಜ ಹಲಶೆಟ್ಟಿ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ದಾಲ್ ಮಿಲ್ ಅಸೋಸಿಯೇಷನ್ ಕಾರ್ಯದರ್ಶಿ ಬಸವರಾಜ ಧನ್ನೂರು, ಪ್ರಮುಖರಾದ ಮಡಿವಾಳಪ್ಪ ಗಂಗಶೆಟ್ಟಿ, ರಾಜಕುಮಾರ ಬಿಜ್ಜಾ, ಶಶಿಧರ ಹೊಸಳ್ಳಿ, ಉದಯಭಾನು ಹಲವಾಯಿ, ನಾರಾಯಣರಾವ್, ರಾಮಕೃಷ್ಣ ಸಾಳೆ, ರಾಜಕುಮಾರ ಮಿಟಕಾರೆ, ರಾಮು ಅಂಬುರೆ, ಶಂಕರರಾವ್ ಪಾಟೀಲ ಸೇರಿದಂತೆ ಇತರರಿದ್ದರು.