ಬೀದರ್: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದವರು ವೈದ್ಯರೆಂದು ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವೀರ ಕನ್ನಡಿಗರ ಸೇನೆ ಒತ್ತಾಯಿಸಿದೆ.
‘ಜಿಲ್ಲೆಯಾದ್ಯಂತ ನಕಲಿ ವೈದ್ಯರು ರಾಜಾರೋಷವಾಗಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿ ಬಡ ರೋಗಿಗಳ ಪ್ರಾಣಕ್ಕೆ ಸಂಚಕಾರ ತರುತ್ತಿದ್ದಾರೆ.
ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ಮಾರ್ಚ್ 21ರಂದು ವೀರ ಕನ್ನಡಿಗರ ಸೇನೆ ರಾಜ್ಯ ಘಟಕದ ಅಧ್ಯಕ್ಷ ಅಮೃತ ಪಾಟೀಲ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಜಿಲ್ಲೆಯಲ್ಲಿ ಬಂಗಾಳ ಮೂಲದ ಎರಡು ಸಾವಿರಕ್ಕೂ ಹೆಚ್ಚು ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದಾರೆ. ಅವರಿಗೆ ಕುಮಕ್ಕು ನೀಡುತ್ತಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೋಡಬೇಕು’ ಎಂದು ಒತ್ತಾಯಿಸಿದ್ದಾರೆ.
ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕ ಸುಬ್ಬಣ್ಣ ಕರಕನಳ್ಳಿ, ಮುಕೇಶ ಶಾಹಗಂಜ್, ನಾಗೇಂದ್ರ, ಬಸವರಾಜ ಜಡಗೆ, ಅಂಬಾದಾಸ ಸೈನೆ, ಸಂಜುಕುಮಾರ ಇದ್ದರು.