ಬೀದರ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕ ನೇತೃತ್ವದಲ್ಲಿ ರೈತರು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಮೂರು ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆದರೂ ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿಲ್ಲ.
ಸರ್ಕಾರ ತಕ್ಷಣ ಮಸೂದೆ ಹಿಂದಕ್ಕೆ ಪಡೆಯಬೇಕು. ತೊಗರಿ ಬೆಳೆಗೆ ನೆಟೆ ರೋಗ ಬಂದು ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಕಳೆದ ವರ್ಷ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆಯು ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ₹ 50 ಬಿಡುಗಡೆ ಮಾಡಿದೆ. ಉಳಿದ ಕಾರ್ಖಾನೆಗಳು ಬಾಕಿ ಹಣ ಬಿಡುಗಡೆ ಮಾಡಿಲ್ಲ. ಕಬ್ಬು ಪೂರೈಸಿದ ರೈತರಿಗೆ ಕಾರ್ಖಾನೆಗಳು 15 ದಿನಗಳಲ್ಲಿ ಬಿಲ್ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.
ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಶೇ 80 ರಷ್ಟು ಬೆಳೆ ನಷ್ಟವಾಗಿದೆ. ಆದರೆ ಬೆಳೆ ವಿಮೆ ಪರಿಹಾರ ಜಮಾ ಆಗಿಲ್ಲ. ತುಂತುರು ನೀರಾವರಿ ಯೋಜನೆಯಲ್ಲಿ ಒಂದು ವರ್ಷದಿಂದ ಪೈಪ್ಗಳನ್ನು ಅಳವಡಿಸಿಲ್ಲ. ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಯೊಬ್ಬ ರೈತರಿಗೆ ಶೂನ್ಯ ಬಡ್ಡಿಯಲ್ಲಿ ₹ 3 ಲಕ್ಷದವರೆಗೆ ಸಹಕಾರ ಬ್ಯಾಂಕ್ನಿಂದ ಸಾಲ ಕೊಡಬೇಕು. 55 ವರ್ಷ ದಾಟಿದ ರೈತರಿಗೆ ₹ 10 ಸಾವಿರ ಗೌರವಧನ ಕೊಡಬೇಕು. ರೈತರ ಹೊಲದಲ್ಲಿನ ಮನೆಗಳಿಗೆ ರಾತ್ರಿ ಹೊತ್ತಿನಲ್ಲಿ ವಿದ್ಯುತ್ ವ್ಯವಸ್ಥೆ ಮಾಡಬೇಕು. ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕ ಮತ್ತು ಗುಣಮಟ್ಟದ ತೆಲಂಗಾಣ ಮಾದರಿಯಲ್ಲಿ 24 ಗಂಟೆ ವಿದ್ಯುತ್ ಕೊಡಬೇಕು ಎಂದು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿ ಅವರಿಗೆ ಬರೆದ ಮನವಿಪತ್ರವನ್ನು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಅವರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೋತಿಲಾಲ ಲಮಾಣಿ ಅವರಿಗೆ ಸಲ್ಲಿಸಿದರು.
ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಶೇಷರಾವ್ ಕಣಜಿ, ಪ್ರವೀಣ ಕುಲಕರ್ಣಿ, ಬಾಬುರಾವ್ ಜೋಳದಾಬಕಾ, ಚಂದ್ರಶೇಖರ ಜಮಖಂಡಿ, ರೇವಣಸಿದ್ದಪ್ಪ ಎರಬಾಗ, ಸುಭಾಷ ರಗಟೆ, ಪ್ರಕಾಶ ಬಾವಗೆ, ಹಣಮಂತ ಬೋರಾಳ, ಲಕ್ಷ್ಮಣರಾವ್ ಜೋಳದಾಬಕಾ, ಭವರಾವ ಪಾಟೀಲ, ಶಿವಾನಂದ ಹುಡಗಿ, ಬಸಪ್ಪಾ ನಿಟ್ಟೂರೆ ಹಾಗೂ ರಾಜಕುಮಾರ ಪಾಟೀಲ ಇದ್ದರು.