ಬೀದರ್: ಯುವಕರಿಗೆ ಸ್ವಾಮಿ ವಿವೇಕಾನಂದರು ಮಾದರಿಯಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್. ಚೇಗರೆಡ್ಡಿ ಹೇಳಿದರು.
ಇಲ್ಲಿಯ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಕಾನೂನು ಅರಿವು-ನೆರವು ಹಾಗೂ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಸಂವಿಧಾನದಲ್ಲಿ ಇರುವ ಅಂಶಗಳನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ನುಡಿದರು.
ಸಮಾಜದ ಪ್ರತಿಯೊಬ್ಬರಿಗೂ ಕಾನೂನು ಅರಿವು ನೀಡಬೇಕು ಎನ್ನುವುದು ಪ್ರಾಧಿಕಾರದ ಆಶಯವಾಗಿದೆ. ಹೀಗಾಗಿ ಗ್ರಾಮ, ಶಾಲಾ, ಕಾಲೇಜು ಮಟ್ಟದಲ್ಲಿ ಪ್ರಾಧಿಕಾರದಿಂದ ಕಾನೂನು ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಕೆ. ಕನಕಟ್ಟೆ ಮಾತನಾಡಿ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಂವಿಧಾನ ಕುರಿತ ಪ್ರಬಂಧ, ಚಿತ್ರ ರಚನೆ, ರಸ ಪ್ರಶ್ನೆ, ಚರ್ಚೆ, ಘೋಷವಾಕ್ಯ ರಚನೆ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ 60 ಮಂದಿಗೆ ಬಹುಮಾನ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ. ಕೃಷ್ಣಪ್ಪ, ಕಾಲೇಜು ಶಿಕ್ಷಣ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಚಂದ್ರಕಾಂತ ಪಾಟೀಲ ಮಾತನಾಡಿದರು.
ಉಪನ್ಯಾಸಕ ಹಣಮಂತರಾವ್ ಗೌಡಗಾಂವಕರ್, ಪ್ರಾಧಿಕಾರದ ಜಗದೀಶ್ವರ ದೊರೆ, ಜೀವನ್ ಜೈವಂತ, ಯೋಹಾನ್ ಇದ್ದರು. ಉಮೇಶ ಮಠದ ನಿರೂಪಿಸಿದರು. ಆಕಾಶ ಸಜ್ಜನ್ ವಂದಿಸಿದರು.