ಬೀದರ್ : ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯವರು ನಮ್ಮದು ಡಬಲ್ ಇಂಜಿನ್ ಸರ್ಕಾರ ಎಂದು ಮಾತಿಗೆ ನೂರು ಬಾರಿ ಹೇಳ್ತಾರೆ ಅವರು ರಾಜ್ಯದ ಜನತೆಗಾಗಿ ಏನು ಒಳಿತು ಮಾಡಿದ್ದಾರೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸದನದಲ್ಲಿಯೇ ಡಬಲ್ ಇಂಜಿನ್ ಸರ್ಕಾರದ ಕಿವಿ ಹಿಂಡಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ನಡೆದ ಬಜೆಟ್ ಅಧಿವೇಶನದ ನಾಲ್ಕನೇ ದಿನದ ಕಲಾಪದಲ್ಲಿ ಪಾಲ್ಗೊಂಡು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತುತ ಯಾವ ರೀತಿಯ ಯೋಜನೆಗಳಿವೆ ಎಂಬುದನ್ನು ತಿಳಿಸಲಾಗಿದೆ. ಆದರೇ ಮುಂದೆ ಏನು ಮಾಡುತ್ತೇವೆ ಎಂಬುದರ ಬಗ್ಗೆ ಹೇಳಿಲ್ಲ ಎನ್ನುವ ಮೂಲಕ ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ವಿರುದ್ಧ ತಮ್ಮ ಭಾಷಣದೂದ್ದಕ್ಕೂ ಆಕ್ರೋಶ ವ್ಯಕ್ತಪಡಿಸಿದರು.