ಬೀದರ್ : ಜಿಲ್ಲೆಯ ಎಲ್ಲಾ ಸರ್ಕಾರಿ ಇಲಾಖೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳು ತಂಬಾಕು ಮುಕ್ತವಾಗಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಹೇಳಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅನುಷ್ಠಾನ ಹಾಗೂ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣದ ಕುರಿತು ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಶೈಕ್ಷಣಿಕ ಸಂಸ್ಥೆಗಳ 100 ಅಡಿ ಅಂತರದಲ್ಲಿ ತಂಬಾಕು ಉತ್ಪನ್ನ, ಮಾರಾಟ ಮತ್ತು ಬಳಕೆ ಮಾಡುವವರು ಕಂಡುಬಂದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಬಾರ್ ಮತ್ತು ರೆಸ್ಟೋರೆಂಟ್ಗಲ್ಲಿ ಸಹ ತಂಬಾಕು ಮಾರಾಟ ಹಾಗೂ ಬಳಕೆಮಾಡದಂತೆ ನಿಯಂತ್ರಿಸಬೇಕೆಂದು ಅಧಿಕಾರಿಗಳಿಗೆ ಸೂಚಿದರು.
ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗಿಯ ಸಮನ್ವಯಾಧಿಕಾರಿ ಮಾಹಂತೇಶ ಬಿ.ವಿ ಮಾತನಾಡಿ 2022-23 ಸಾಲಿನಲ್ಲಿ ಬೀದರ ಜಿಲ್ಲೆಯ ಬೀದರ- 11 ಹುಮನಾಬಾದ- 7, ಬಸವಕಲ್ಯಾಣ- 17 ಭಾಲ್ಕಿ- 3 ಹಾಗೂ ಔರಾದ ತಾಲೂಕಿನಲ್ಲಿ- 5 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 43 ತಂಬಾಕು ಮಾರಾಟಗಾರರ ಮೇಲೆ ದಾಳಿ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಏಪ್ರೀಲ್-2022ರಿಂದ ಡಿಸೆಂಬರ್-2022 ವರೆಗೆ ಒಟ್ಟು 1,885 ಪ್ರಕರಣ ದಾಖಲಾಗಿದ್ದು, ಒಟ್ಟು 1,68,860 ರೂಪಾಯಿಗಳ ದಂಡ ವಿದಿಸಲಾಗಿದೆ. ಎಂದ ಅವರು ತಂಬಾಕು ನಿಯಂತ್ರಣಕ್ಕಾಗಿ ಅಧಿಕಾರಿಗಳು ತಂಬಾಕು ಉತ್ಪನ್ನ ಮಾರಾಟಗಾರರ ಮೇಲೆ ಇನ್ನು ಹೆಚ್ಚಿನ ದಾಳಿ ನಡೆಸುವ ಅವಶ್ಯಕತೆ ಇದೆ ಎಂದರು
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.