ಬೀದರ್: ‘ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬಿತ್ತಿದ್ದರು’ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ ಟೊಣ್ಣೆ ಹೇಳಿದರು.
ತುಮಕೂರಿನ ಡಾ. ಶಿವಕುಮಾರ ಸ್ವಾಮೀಜಿ ಅವರ ನಾಲ್ಕನೇ ಪುಣ್ಯ ಸ್ಮರಣೋತ್ಸವ ನಿಮಿತ್ತ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಶಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಶಿವನಗರದಲ್ಲಿರುವ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ದಾಸೋಹ ದಿನ, ವಿಜಯಪುರದ ಸಿದ್ಧೇಶ್ವರ ಸ್ವಾಮೀಜಿ ಅವರ ನುಡಿ ನಮನ ಹಾಗೂ ಸಂಘ ಸಿರಿ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಕರಂಜೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ಕೊಟ್ಟ ಕಾರಣ ಸಿದ್ಧಗಂಗಾ ಮಠದಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿದ್ದಾರೆ. ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ತುಮಕೂರಿನ ಹಳೆಯ ವಿದ್ಯಾರ್ಥಿಗಳ ಸಂಘದ ‘ಸಂಘ ಸಿರಿ’ ಪ್ರಶಸ್ತಿ ಲಭಿಸಿರುವುದು ಸಂತಸ ಉಂಟು ಮಾಡಿದೆ. ಪ್ರಶಸ್ತಿ ನನ್ನ ಸಾಮಾಜಿಕ ಹೊಣೆಗಾರಿಕೆ ಹೆಚ್ಚಿಸಿದೆ ಎಂದು ಸನ್ಮಾನ ಸ್ವೀಕರಿಸಿದ ಸಂಘ ಸಿರಿ ಪ್ರಶಸ್ತಿ ಪುರಸ್ಕೃತ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಶಿಗಳ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ ತಿಳಿಸಿದರು.
ಶಿವಕುಮಾರ ಸ್ವಾಮೀಜಿ ಅವರ ಸಮಾಜೋಧಾರ್ಮಿಕ ಕಾರ್ಯಗಳನ್ನು ವರ್ಣಿಸಲು ಪದಗಳೇ ಸಾಲವು. ಅವರ ಜೀವನ ಹಾಗೂ ಸಾಧನೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ದಿಸೆಯಲ್ಲಿ ಸಂಘದಿಂದ ಬರುವ ದಿನಗಳಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ ಎಂದು ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಶಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ. ಕಾರ್ಯಕ್ರಮ ಉದ್ಘಾಟಿಸಿದರು. ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸಿದ್ದರು.
ಉದ್ಯಮಿ ಸಹಜಾನಂದ ಕಂದಗೂಳ, ನಿವೃತ್ತ ಮುಖ್ಯಶಿಕ್ಷಕ ಸಿದ್ಧಾರೆಡ್ಡಿ ನಾಗೋರಾ, ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ ಪಾಟೀಲ ಪಾಶಾಪುರ, ಪ್ರಮುಖರಾದ ಅಪ್ಪಾರಾವ್ ನವಾಡೆ, ವೈಜಿನಾಥ ನಿಡೋದಾ, ಶರಣಪ್ಪ ಕಿವುಡೆ, ಸುಭಾಷ್ ಸಿರಂಜೆ, ಟಿ.ಎಂ. ಮಚ್ಚೆ, ವೈಜಿನಾಥ ಚಿಕ್ಕಬಸೆ, ಶಿವಪುತ್ರ ಪಟಪಳ್ಳಿ, ಅನಿಲ್ ಪೋಲಾ, ಸಿದ್ಧಾರೂಢ ಭಾಲ್ಕೆ, ಆನಂದ ಪಾಟೀಲ, ಅಶೋಕ ದಿಡಗೆ, ಪ್ರದೀಪ್, ಭೀಮರಾವ್ ಬೀದರ್ಕರ್ ಹಾಗೂ ಸಂತೋಷ ಕೋಸಂ ಇದ್ದರು.
ಹಾವಯ್ಯ ಸ್ವಾಮಿ ನಿರೂಪಿಸಿದರು. ಪವನ್ ಬಿರಾದಾರ ಸ್ವಾಗತಿಸಿದರು. ಶಶಿಕಾಂತ ಪಾಟೀಲ ತೇಗಂಪುರ ವಂದಿಸಿದರು.