ಚಿಟಗುಪ್ಪ: ತಾಲ್ಲೂಕಿನ ಭವಾನಿ ನಗರಕ್ಕೆ ಗೋವಿಂದ ತಾಂಡದಿಂದ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆಯೂ 12 ವರ್ಷಗಳಿಂದ ಅಭಿವೃದ್ಧಿಗೊಳ್ಳದೇ ನನೆಗುದಿಗೆ ಬಿದ್ದಿದ್ದು, ಗ್ರಾಮಸ್ಥರು ಹಾಗೂ ವಾಹನ ಚಾಲಕರು ಪರದಾಡುತ್ತಿದ್ದಾರೆ.
ಈ ರಸ್ತೆಯು ಮುತ್ತಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿದ್ದು, ಮದರಗಿ ಗ್ರಾಮ, ಗೋವಿಂದ ತಾಂಡಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಈ ರಸ್ತೆಗೆ ಅನುದಾನ ಒದಗಿಸಬೇಕೆಂದು ಕೇಳಿಕೊಳ್ಳಲಾಗಿತ್ತು. ಆದರೆ ಸ್ಥಳೀಯ ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದಾಗಿ ಯಾವ ಯೋಜನೆಯೂ ಈ ರಸ್ತೆಗೆ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಸಂದರ್ಭ ಈ ರಸ್ತೆಯನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದು ಆಶ್ವಾಸನೆ ಕೊಡುವ ಜನಪ್ರತಿನಿಧಿಗಳು ಚುನಾವಣೆ ಬಳಿಕ ಈ ಕಡೆ ತಲೆಹಾಕುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ರಸ್ತೆ ಬಗ್ಗೆ ಜನಪ್ರತಿನಿಧಿಗಳು ಅಭಿವೃದ್ಧಿ ಪಡಿಸದಿದ್ದಲ್ಲಿ ಮುಂದೆ ಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಮಳೆಗಾಲದಲ್ಲಿ ರಸ್ತೆ ತುಂಬ ನೀರು ನಿಂತು ಎಲ್ಲಂದರಲ್ಲಿ ಕೆಸರು ಉಂಟಾಗಿ ದ್ವಿಚಕ್ರ ವಾಹನವೂ ಸಂಚರಿಸಲು ಕಷ್ಟವಾಗುತ್ತದೆ. ಆಸ್ಪತ್ರೆ ಇತರ ತುರ್ತು ಕೆಲಸಕ್ಕೆ ಗ್ರಾಮಸ್ಥರು ಹೋಗುವುದು ಸಾಧ್ಯವಾಗುತ್ತಿಲ್ಲ. ಶಾಲಾ ಮಕ್ಕಳು ನಡೆದುಕೊಂಡು ಸಮೀಪದ ಗೋವಿಂದ ತಾಂಡ, ಮದರಗಿ ಗ್ರಾಮಗಳಿಗೆ ಹೋಗಬೇಕಾಗಿದೆ ಆದರೆ ಮಳೆಗಾಲದಲ್ಲಿ ಶಾಲೆಗೆ ಹೋದ ಮಕ್ಕಳು ಮರಳಿ ಮನೆಗೆ ಬರುವವರೆಗೂ ಚಾತಕ ಪಕ್ಷಿಯಂತೆ ಎದಿರು ನೋಡುತ್ತ ಕುಳಿತುಕೊಳ್ಳುವಂತಾಗಿದೆ ಪಾಲಕರ ಪರಿಸ್ಥಿತಿ. ಕಾರಣ ತಕ್ಷಣ ಸಂಬಂಧಿಸಿದ ಅಧಿಕಾರಿಗಳು ರಸ್ತೆ ಡಾಂಬರೀಕರಣ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.