ಹುಮನಾಬಾದ್ : ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನನ್ನ ಹೆಸರು ಘೋಷಣೆ ಮಾಡಿದ್ದು, ಬಿ ಫಾರಂ ನೀಡಲು ₹ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಎಸ್ಪಿ ಅಭ್ಯರ್ಥಿ ಅಂಕುಶ್ ಗೋಖಲೆ ಆರೋಪಿಸಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಯೆಂದು ಅಧಿಕೃತವಾಗಿ ನನ್ನ ಹೆಸರನ್ನು ಘೋಷಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್ 13ರಂದು ಬಿ ಫಾರಂ ತೆಗೆದುಕೊಳ್ಳಲು ಬೆಂಗಳೂರಿಗೆ ಹೋದಾಗ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಅಶೋಕ್ ಸಿದ್ದಾರ್ಥ, ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಕೃಷ್ಣ ಮೂರ್ತಿ, ಮಾನಸಂದ್ರ ಮುನಿಯಪ್ಪ ಅವರು ನಿಮ್ಮಗೆ ಟಿಕೆಟ್ ನೀಡುವುದಿಲ್ಲ ಎಂದರು. ಯಾಕೆ ಟಿಕೆಟ್ ನೀಡುವುದಿಲ್ಲ, ಹಾಗಿದ್ದರೆ ನನ್ನ ಹೆಸರು ಏಕೆ ಘೋಷಣೆ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನೀವು ಪಕ್ಷಕ್ಕೆ ₹ 50 ಲಕ್ಷ ನೀಡಬೇಕು ಎಂದು ಬೇಡಿಕೆ ಇಟ್ಟರು ಎಂದು ಗಂಭೀರ ಆರೋಪ ಮಾಡಿದರು.
‘ಬಹುಜನ ಸಮಾಜ ಪಕ್ಷ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಾರಿಕೊಂಡಿದ್ದಾರೆ. ಹೀಗಾಗಿ ಜಿಲ್ಲಾ ಬಿಎಸ್ಪಿಯ ಮಾಜಿ ಅಧ್ಯಕ್ಷ ಜಮಿಲ್ ಖಾನ್ ಸೇರಿದಂತೆ ಇತರರು ರಾಜೀನಾಮೆ ಸಲ್ಲಿಸುವ ನಿರ್ಧಾರ ಮಾಡಿದ್ದೇವೆ’ ಎಂದು ತಿಳಿಸಿದರು.
ಪಕ್ಷದ ಅಭ್ಯರ್ಥಿಯಾಗಿ ಕ್ಷೇತ್ರದಾದ್ಯಂತ ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿದ್ದೇನೆ. ಮುಂದಿನ ರಾಜಕೀಯ ಬೆಳವಣಿಗೆ ಬಗ್ಗೆ ಏಪ್ರಿಲ್ 16ರಂದು ಕಾರ್ಯಕತರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಮುಂದಿನ ಹೆಜ್ಜೆ ನಿರ್ಧರಿಸಲಾಗುವುದು ಎಂದರು.