ಭಾಲ್ಕಿ: ಪಿಯು ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಿವಾಜಿ ಕಾಲೇಜಿನ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಕಿಸಾನ ಶಿಕ್ಷಣ ಪ್ರಸಾರಕ ಮಂಡಳ ಅಧ್ಯಕ್ಷ ಅನಿಲ್ ಬಿ.ಶಿಂಧೆ ಘೋಷಿಸಿದರು.
ಪಟ್ಟಣದ ಶಿವಾಜಿ ಕಾಲೇಜಿನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ನಮ್ಮ ಕಾಲೇಜಿನ ಕ್ರೀಡಾಪಟುಗಳು ಕೊಕ್ಕೊ, ಸೈಕ್ಲಿಂಗ್, ಯೋಗ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ ನೀಡಿ ರಾಜ್ಯ ಮಟ್ಟದಲ್ಲಿ ಸಹ ಪ್ರಥಮ ಸ್ಥಾನ ಗಿಟ್ಟಿಸುವಂತೆ ನೋಡಿಕೊಳ್ಳಬೇಕು’ ಎಂದು ದೈಹಿಕ ಶಿಕ್ಷಣ ಉಪನ್ಯಾಸಕರಿಗೆ ಕಿವಿಮಾತು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಪಾಟೀಲ ಮಾತನಾಡಿ, ‘ಶಿಕ್ಷಣ, ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಶಿವಾಜಿ ಕಾಲೇಜು ಪ್ರಗತಿ ಸಾಧಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿ’ ಎಂದರು.