ಬೀದರ್: ಭಾಲ್ಕಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಶಾಲಾ ಕೊಠಡಿ, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಇತರೆ ವಿವಿಧ ಅಭಿವೃದ್ಧಿಗಾಗಿ 225 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಲಾಗಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಗುರುವಾರ ಭಾಲ್ಕಿಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಭಾಲ್ಕಿ ತಾಲ್ಲೂಕಿನ ಸಾರ್ವಜನಿಕ ಕುಂದು ಕೊರತೆಗಳ ಜನಸ್ಪಂಧನ ಸಭೆ ಮತ್ತು ಗ್ಯಾರಂಟಿ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾಲ್ಕಿ ತಾಲೂಕಿನಲ್ಲಿ 225 ಕೋಟಿ ರೂ. ಗಳ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು ಇನ್ನೂ 150 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಭಾಲ್ಕಿ ತಾಲೂಕಿನಲ್ಲಿ ಹೊಸದಾಗಿ 2 ಸಾವಿರ ಮನೆಗಳನ್ನು ಮಂಜೂರಾತಿ ಮಾಡಲಾಗಿದ್ದು ವಸತಿ ರಹಿತರಿಗೆ ಆಯ್ಕೆಮಾಡಿ ಮನೆಗಳನ್ನು ಮಂಜೂರು ಮಾಡಲಾಗುವುದು ಯಾರು ಮಧ್ಯವರ್ತಿ ಹಾಗೂ ದಲ್ಲಾಳಿಗಳಿಗೆ ಹಣ ಕೊಡಬೇಕಾಗಿಲ್ಲ ಎಂದರು.
ತಾಲ್ಲೂಕಿನ ರೈತರಿಗೆ ಹೆಚ್ಚುವರಿಯಾಗಿ ಸ್ಪಿಂಕಲರ್ ಅಥವಾ ಹನಿ ನೀರಾವರಿಗೆ 5 ಕೋಟಿ ಹೆಚ್ಚುವರಿ ಅನುದಾನ ನೀಡಿದ್ದು ಇದರಿಂದ 2748 ರೈತರಿಗೆ ಅನುಕೂಲವಾಗಲಿದೆ. ಪ್ರತಿ ರೈತರಿಗೆ 21775 ರೂ. ಸಹಾಯಧನ ಸಿಗಲಿದೆ ಮತ್ತು ಸ್ವ ಸಹಾಯ ಸಂಘದ ಮಹಿಳೆಯರಿಗೆ 5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಹಾಯ ಧನ ನೀಡಲಾಗುತ್ತದೆ ಹಾಗಾಗಿ ಸ್ವ- ಸಹಾಯ ಸಂಘಗಳು ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಹೇಳಿದರು.
ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿವೆಯಾ ಎಂದು ತಮ್ಮ ಸಮಸ್ಯೆಗಳನ್ನು ತಿಳಿಯಲು ತಮಗೆಲ್ಲರಿಗೂ ಆಹ್ವಾನ ಮಾಡಲಾಗಿದೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದು, ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ ಎಲ್ಲಾ ಮಹಿಳೆಯರು ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಮತ್ತು ಹಲವಾರು ದೇವಾಲಯಗಳಿಗೂ ಭೇಟಿ ನೀಡುವುದರ ಮೂಲಕ ತಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳುತ್ತಿದ್ದಾರೆ ಎಂದರು.
ಗೃಹ ಲಕ್ಷ್ಮೀ ಯೋಜನೆಯಿಂದ ಮನೆಯ ಯಜಮಾನಿಗೆ 2 ಸಾವಿರ ರೂ. ಪ್ರತಿ ತಿಂಗಳು ಸಿಗುತ್ತಿದೆ ವರ್ಷಕ್ಕೆ ಒಬ್ಬರಿಗೆ 24 ಸಾವಿರ ರೂ. ಆಗಲಿದೆ. ಈ ಯೋಜನೆಯ ಲಾಭ ಸಿಗದವರು ಮಾಹಿತಿ ನೀಡಬೇಕು. ಉಚಿತವಾಗಿ ಕರೆಂಟ್ ನೀಡುತ್ತೆವೆ ಎಂದು ಹೇಳಿದಂತೆ ಎಲ್ಲರ ಮನೆಗೆ ಫ್ರೀ ಕರೆಂಟ್ ನೀಡಲಾಗುತ್ತಿ. ಬೀದರ ಜಿಲ್ಲೆಯಲ್ಲಿ 3 ಲಕ್ಷ 20 ಸಾವಿರ ಜನರಿಗೆ ಇದರ ಲಾಭ ಸಿಗುತ್ತಿದೆ ಎಂದರು.
ಅನ್ನಭಾಗ್ಯ ಯೋಜನೆ ಬೀದರ ಜಿಲ್ಲೆಯ 11 ಲಕ್ಷ 20 ಸಾವಿರ ಫಲಾನುಭವಿಗಳ ಹೆಚ್ಚುವರಿ 5 ಕೆ.ಜಿ ಅಕ್ಕಿ ಹಣ ನೇರವಾಗಿ ಅವರ ಖಾತೆಗೆ ಜಮೆ ಆಗುತ್ತಿದೆ. ಯುವಕರಿಗೆ ನಿರುದ್ಯೋಗ ದೊಡ್ಡ ಸಮಸ್ಯೆ. ಇದನ್ನು ಹೋಗಲಾಡಿಸಲು ಪದವಿ ಮತ್ತು ಡಿಪ್ಲೊಮಾ ಮುಗಿಸಿದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ 2 ವರ್ಷಗಳವರೆಗೆ ನಿರುದ್ಯೋಗ ಭತ್ಯ ನೀಡಲಾಗುತ್ತಿದೆ ಎಂದರು.
ಜಿಲ್ಲೆಯ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಸಮಸ್ಯೆಗಳು ಎಲ್ಲರಿಗೂ ಇರುತ್ತವೆ. ಅದಕ್ಕೆ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲಾ. ನಿಮ್ಮ ಜೊತೆಗೆ ನಾವಿದ್ದೆವೆ ಎಂದ ಖಂಡ್ರೆ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದ ಸದಸ್ಯರಿಗೆ 5 ಲಕ್ಷದ ಚೆಕ್ ವಿತರಿಸಿ ಅವರಿಗೆ ಆತ್ಮಸ್ಥೈರ್ಯ ತುಂಬಿದರು.
ಪಡಿತರ ಚೀಟಿ, ಮಾಶಾಸನ, ವಿಧವಾ ವೇತನ, ಅಂಗವಿಕಲ ಸಹಾಧನ ಸೇರಿದಂತೆ ಇತರೆ ಸಮಸ್ಯೆಗಳ ಅಹವಾಲುಗಳನ್ನು ಸಚಿವರಿಗೆ ಜನರು ಸಲ್ಲಿಸಿದರು. ವಿವಿಧ ಇಲಾಖೆಗಳ ಮಳಿಗೆಗಳಲ್ಲಿಯೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಮತ್ತು ಅವುಗಳಿಗೆ ಪರಿಹಾರ ನೀಡುವಂತೆ ಸಚಿವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸಹಾಯ ಸೌಲಭ್ಯಗಳನ್ನು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೊಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಬೀದರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎ., ಅಮೃತರಾವ ಚಿಮಕೋಡೆ, ಬಸವಕಲ್ಯಾಣ ಸಹಾಯಕ ಆಯುಕ್ತರಾದ ಪ್ರಕಾಶ ಕುದರೆ, ಭಾಲ್ಕಿ ತಹಶಿಲ್ದಾರ ಶ್ರೇಯಾಂಕ ಧನಶ್ರೀ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.