ಬೀದರ್: ನನಗೆ ಬರುವ ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪುವ ಹಗಲುಗನಸು ಕಾಣುವುದನ್ನು ಸಚಿವ ಈಶ್ವರ ಖಂಡ್ರೆ ಬಿಡಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ.
ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಅನುದಾನ ಕೇಳಿದರೆ ಟಿಕೆಟ್ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ತಮ್ಮ ಬಗ್ಗೆ ಮಾತನಾಡಿದರೆ ಟಿಕೆಟ್ ಸಿಗುತ್ತದೆ ಎನ್ನುವ ಖಂಡ್ರೆ ಅವರ ಹೇಳಿಕೆ ಹಾಸ್ಯಾಸ್ಪದ ಹಾಗೂ ದಡ್ಡತನದ್ದು ಎಂದು ಟೀಕಿಸಿದ್ದಾರೆ.
ಉಸ್ತುವಾರಿ ಸಚಿವರು ತಮಗೆ ದೊರೆತ ಅಧಿಕಾರ ನಿಭಾಯಿಸುವಲ್ಲಿ ಹಾಗೂ ಜಿಲ್ಲೆಯ ರೈತರಿಗೆ ಬರ ಪರಿಹಾರ ಕೊಡಿಸುವಲ್ಲಿ ವಿಫಲವಾಗಿದ್ದಾರೆ. ಇಲ್ಲಸಲ್ಲದ ಹೇಳಿಕೆ ನೀಡಿ, ಜನರ ಗಮನ ಬೇರೆಡೆ ಸೆಳೆಯುವ ಕೆಳಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಐದು ತಿಂಗಳ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಕ್ಕೆ ಸಹಕರಿಸಿಲ್ಲ. ರಾಜ್ಯದಿಂದ ಅನುದಾನ ತರುವ ಸಣ್ಣ ಪ್ರಯತ್ನವೂ ಮಾಡಿಲ್ಲ. ಸಿಪೆಟ್ ಆರಂಭಕ್ಕೆ ಅವರು ಅಡ್ಡಿಪಡಿಸಿರುವ ವಿಷಯ ಹೊಸದೇನೂ ಅಲ್ಲ ಎಂದು ತಿಳಿಸಿದ್ದಾರೆ.
ಹೊಸ ರೈಲುಗಳ ಆರಂಭ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ವಿಮಾನಯಾನ ಸೇವೆ, ಪಾಸ್ಪೋರ್ಟ್ ಸೇವಾ ಕೇಂದ್ರ ಸ್ಥಾಪನೆ, ಸೈನಿಕ ಶಾಲೆ, ಸಿಪೆಟ್ ಮಂಜೂರಾತಿ ಸೇರಿದಂತೆ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ಮುಂದೆ ಅವರ ಆಟ ನಡೆಯಲ್ಲ. ನನ್ನನ್ನು ನೇರವಾಗಿ ಎದುರಿಸಲಾಗದೆ ಷಡ್ಯಂತ್ರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.