ಬೀದರ್: ಲೋಕಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.
ಪಕ್ಷದಲ್ಲಿ ತೀವ್ರ ತಿಕ್ಕಾಟವಿದ್ದರೂ ಕಾಂಗ್ರೆಸ್ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಬಿಜೆಪಿ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿ ಎಲ್ಲ ರೀತಿಯ ಗೊಂದಲಗಳಿಗೆ ತೆರೆ ಎಳೆದಿದೆ.
ಹಾಲಿ ಸಂಸದರೂ ಆದ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮೂರನೇ ಸಲ ಪಕ್ಷ ಟಿಕೆಟ್ ನೀಡಿದೆ. ಇದರೊಂದಿಗೆ ಬಿಜೆಪಿಯ ‘ಸಸ್ಪೆನ್ಸ್’ಗೆ ತೆರೆ ಬಿದ್ದಿದೆ. ಆದರೆ, ಕಾಂಗ್ರೆಸ್ ಇನ್ನೂ ಗೊಂದಲದಲ್ಲಿ ಮುಳುಗಿರುವಂತೆ ಕಾಣಿಸುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರ ಹೆಸರು ಈ ಹಿಂದೆ ಕೇಳಿ ಬಂದಿತ್ತು. ಆದರೆ, ಸ್ವತಃ ಅವರೇ ಅದನ್ನು ಸ್ಪಷ್ಟ ಮಾತುಗಳಲ್ಲಿ ನಿರಾಕರಿಸಿದ್ದಾರೆ. ಆನಂತರ ಮಾಜಿಸಚಿವರೂ ಆದ ಕಾಂಗ್ರೆಸ್ ಮುಖಂಡ ರಾಜಶೇಖರ ಪಾಟೀಲ ಹುಮನಾಬಾದ್ ಅವರ ಹೆಸರು ಕೇಳಿ ಬಂದಿತ್ತು. ದಿನಗಳು ಕಳೆದಂತೆ ಸಚಿವ ಈಶ್ವರ ಖಂಡ್ರೆಯವರ ಮಗ ಸಾಗರ್ ಖಂಡ್ರೆಯವರ ಹೆಸರು ಮುಂಚೂಣಿಗೆ ಬಂದಿದೆ. ಜಿಲ್ಲೆಯ ಪ್ರತಿಯೊಂದು ಭಾಗದಲ್ಲಿ ಅವರ ಬ್ಯಾನರ್, ಫ್ಲೆಕ್ಸ್ಗಳು ರಾರಾಜಿಸುತ್ತಿದ್ದು, ಚುನಾವಣೆಗೆ ಬೇಕಾದ ಅಗತ್ಯ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.