ಬೀದರ್, ಜೂ.21: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜೂನ್.22ರ ಗುರುವಾರದ ನಾಳೆ ಔರಾದ್ ತಾಲೂಕಿನ ಕರಕ್ಯಾಳ್ ಗೆ ಭೇಟಿ ನೀಡುತ್ತಿದ್ದು, ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿರುವ ಮಕ್ಕಳ ಆರೋಗ್ಯ ವಿಚಾರಿಸಲಿದ್ದಾರೆ.
ಪ್ರಸ್ತುತ ದೆಹಲಿ ಅಧಿಕೃತ ಪ್ರವಾಸದಲ್ಲಿರುವ ಅವರು, ಇಂದು ರಾತ್ರಿ ಹೈದ್ರಾಬಾದ್ ಮಾರ್ಗವಾಗಿ ಭಾಲ್ಕಿಗೆ ಆಗಮಿಸಲಿದ್ದು, ನಾಳೆ ಬೆಳಗ್ಗೆ 11.40ರ ಹೊತ್ತಿಗೆ ಕರಕ್ಯಾಳಕ್ಕೆ ತೆರಳಿ ಕಲುಷಿತ ನೀರಿಗೆ ಕಾರಣವೇನು ಎಂಬ ಕುರಿತಂತೆಯೂ ಮಾಹಿತಿ ಪಡೆಯಲಿದ್ದಾರೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಈಶ್ವರ ಖಂಡ್ರೆ ಅವರು, ನಾಳೆ ಮಧ್ಯಾಹ್ನ ಬೀದರ್ ನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯಲ್ಲಿ ಸಮರ್ಪಕ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ಕಲುಷಿತ ನೀರಿನ ಸಮಸ್ಯೆಯ ಕುರಿತಂತೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿದಂತೆ ಗ್ರಾಮಸ್ಥರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು ಎಲ್ಲ ಅಸ್ವಸ್ಥರ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ಆಯಾ ವಿಭಾಗದ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.