ಬೀದರ್: ಬಿಜೆಪಿಯ ದುರಾಡಳಿತ ಹಾಗೂ ಭ್ರಷ್ಟಾಚಾರದಿಂದ ಬೇಸತ್ತಿರುವ ರಾಜ್ಯದ ಜನ ಈ ಬಾರಿ ಕಾಂಗ್ರೆಸ್ ಕೈಗೆ ಆಡಳಿತದ ಚುಕ್ಕಾಣಿ ಕೊಡಲಿದ್ದಾರೆ ಎಂದು ಬೀದರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಹೀಂಖಾನ್ ಹೇಳಿದರು.
ನಗರದ ವಿವಿಧೆಡೆ ಪಾದಯಾತ್ರೆ ಮೂಲಕ ಮನೆ ಮನೆಗೆ ಭೇಟಿ ನೀಡಿ, ಮತ ಯಾಚಿಸಿ ಅವರು ಮಾತನಾಡಿದರು.
ಬಿಜೆಪಿ ಆಡಳಿತದಲ್ಲಿ ಶೇ 40 ರಷ್ಟು ಭ್ರಷ್ಟಾಚಾರ ನಡೆದಿರುವುದು ಜಗ ಜಾಹೀರಾಗಿದೆ. ಹಣ ಕೊಡದೆ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗಿಲ್ಲ. ರಾಜ್ಯದ ಅಭಿವೃದ್ಧಿಯೂ ಕುಂಠಿತಗೊಂಡಿದೆ. ಹೀಗಾಗಿ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಸಾಧನೆಗಳನ್ನು ಜನ ಈಗಲೂ ಮರೆತಿಲ್ಲ. ಆಗ ಜಾರಿಗೊಳಿಸಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಜನಪರ ಕಾಳಜಿಯನ್ನು ಕೊಂಡಾಡುತ್ತಿದ್ದಾರೆ ಎಂದು ಹೇಳಿದರು.
ಶಾಸಕನಾಗಿ ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ವಿವಿಧ ಅಭಿವೃದ್ಧಿ ಕಾರ್ಯಗಳು ಎಲ್ಲರ ಕಣ್ಣೆದುರೇ ಇವೆ. ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದೇನೆ. ವಿವಿಧ ಯೋಜನೆಗಳ ಲಾಭ ಅರ್ಹರಿಗೆ ತಲುಪಿಸಿದ್ದೇನೆ ಎಂದು ತಿಳಿಸಿದರು.
ಬೀದರ್ ಕ್ಷೇತ್ರ ಹಾಗೂ ಜನರ ಒಳಿತಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಜನ ಸೇವೆಗೆ ಇನ್ನೊಂದು ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು.
ಶಾಸಕರು ನಾವದಗೇರಿ, ಜಬ್ಬಾರ್ ಕಾಲೊನಿ, ಉಸ್ಮಾನ್ ಗಂಜ್, ಬಟ್ಟೆ ಬಾಜಾರ್, ರಾಮ ಮಂದಿರ ಪ್ರದೇಶ, ಚಾಂಬೋಳ್ ಮೊದಲಾದ ಕಡೆಗಳಲ್ಲಿ ಪ್ರಚಾರ ನಡೆಸಿದರು.