ಹುಮನಾಬಾದ್: ಕ್ಷೇತ್ರದ ಅಭಿವೃದ್ಧಿಗೆ ಶಾಸಕ ರಾಜಶೇಖರ ಪಾಟೀಲ ಅವರ ಕೊಡುಗೆ ಅಪಾರವಾಗಿದೆ. ಕ್ಷೇತ್ರದಲ್ಲಿ ಸರ್ವರಿಗೂ ಉತ್ತಮ ಶಿಕ್ಷಣ ಒದಗಿಸಲು ದೆಹಲಿ ಮಾದರಿಯ ಶಾಲೆಗಳು ನಿರ್ಮಾಣ ಮಾಡಿದ್ದಾರೆ. ಪಟ್ಟಣ ಸೇರಿ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿ ಹಾಗೂ ಸುಂದರೀಕರಣಕ್ಕೆ ಆದ್ಯತೆ ನೀಡಿದ್ದಾರೆ. ಹೀಗಾಗಿ ಬರುವ ಚುನಾವಣೆಯಲ್ಲಿ ಶಾಸಕ ರಾಜಶೇಖರ ಪಾಟೀಲ ಅವರನ್ನು ಬೆಂಬಲಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಹೇಳಿದರು.
ಪಟ್ಟಣದ ರಾಜರಾಜೇಶ್ವರ ದೇವಸ್ಥಾನದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ನಡೆದ ಮಹಿಳಾ ದಿನಾಚರಣೆ, ಮಾತೃ ನಮನ ಹಾಗೂ ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ಪಾಟೀಲ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಅಡಿ ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ, ಗೃಹ ಜ್ಯೋತಿ ಯೋಜನೆಯಲ್ಲಿ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ ಹಾಗೂ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿಮನೆಯ ಯಜಮಾನಿಗೆ ಪ್ರತಿ ತಿಂಗಳಿಗೆ ₹2000 ಖಚಿತವಾಗಿ ನೀಡಲಾಗುತ್ತದೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ರಚನೆಗೆ ಮತದಾರರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪಟ್ಟಣದ ರಾಜರಾಜೇಶ್ವರಿ ಆವರಣದಲ್ಲಿ ಮಹಿಳಾ ದಿನಾಚರಣೆ ಹಾಗೂ ಮಾತೃ ನಮನ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಸುಮಾರು 25ರಿಂದ 30 ಸಾವಿರ ಮಹಿಳೆಯರು ಭಾಗವಹಿಸಿದ್ದರು ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು. ಸಮಾವೇಶದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕ ರಹಿಂಖಾನ್, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ, ಪುರಸಭೆ ಅಧ್ಯಕ್ಷೆ ನೀತು ಶರ್ಮಾ, ಜಿ.ಪಂ. ಮಾಜಿ ಸದಸ್ಯ ವೀರಣ್ಣ ಪಾಟೀಲ, ರೇವಣಸಿದ್ದಪ್ಪ ಪಾಟೀಲ, ಅಕ್ಷಯ ಪಾಟೀಲ, ರುದ್ರಂ ಪಾಟೀಲ, ತಾಪಂ. ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ, ಬಾಬು ಟೈಗರ್, ಸುರೇಶ ಘಾಂಗ್ರೆ ಸೇರಿ ಇದ್ದರು.