ಹುಲಸೂರ: ಸಮೀಪದ ಪಾಂಡ್ರಿ ಗ್ರಾಮದ ಶ್ರೀರಂಗರಾವ ಗಾಜರೆ ಐದು ಎಕರೆ ಜಮೀನಲ್ಲಿ ನುಗ್ಗೆ ಬೆಳೆದು ಯಶಸ್ಸು ಕಂಡಿದ್ದಾರೆ.
ಶ್ರೀರಂಗರಾವ ಅವರು ಕಳೆದ ವರ್ಷದ ಸಪ್ಟೆಂಬರ್ನಲ್ಲಿ ಒಟ್ಟು 5 ಸಾವಿರ ನುಗ್ಗೆ ಗಿಡಗಳನ್ನು ನಾಟಿ ಮಾಡಿದ್ದರು. 12 ಅಡಿಗಳ ಅಂತರದಲ್ಲಿ ಹಾಕಿದ ಗಿಡಗಳು ಆರು ತಿಂಗಳಲ್ಲಿ ಕಾಯಿ ಬಿಟ್ಟಿವೆ.
ಮೊದಲ ಹಂತದಲ್ಲಿ ಒಂದು ಕ್ವಿಂಟಾಲ್ಗೂ ಹೆಚ್ಚು ನುಗ್ಗೆ ಮಾರಾಟ ಮಾಡಿದ್ದಾರೆ. ಬಹುವಾರ್ಷಿಕ ತರಕಾರಿ ಬೆಳೆಯಾಗಿರುವ ನುಗ್ಗೆ ಇನ್ನೂ ಹಲವು ದಿನ ಫಸಲು ನೀಡಲಿದೆ. ನಾಲ್ಕು ದಿನಕ್ಕೊಮ್ಮೆ ಕಿತ್ತು ಮಾರುಕಟ್ಟೆಗೆ ತೆಗೆದುಕೊಂಡು ಹೋಗುತ್ತಾರೆ.
‘ತೋಟಗಾರಿಕೆ ಅಧಿಕಾರಿಗಳೊಂದಿಗೆ ಚರ್ಚಿಸುವಾಗ ನುಗ್ಗೆ ಬೆಳೆಯ ಬಗ್ಗೆ ಮಾಹಿತಿ ಸಿಕ್ಕಿತು. ಐದು ಎಕರೆಗೆ ‘ಓಡಿಸ್ಸಿ’ ತಳಿಯ ಐದು ಸಾವಿರ ಸಸಿಗಳನ್ನು ನೆಟ್ಟಿದ್ದೆ. ಸಮಗ್ರ ತೋಟಗಾರಿಕೆಗೆ ಯೊಜನೆ ಅಡಿಯಲ್ಲಿ ಸಸಿ ನಾಟಿ ಮಾಡಲು ಸಹಾಯಧನ ಒದಗಿಸಿದ್ದರಿಂದ ಇದು ಸಾಧ್ಯವಾಗಿದೆ’ ಎಂದು ಶ್ರೀರಂಗರಾವ ಹೇಳಿದರು.
ಸ್ಥಳಿಯ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ₹55 ರಂತೆ ನುಗ್ಗೆ ಮಾರಾಟ ಮಾಡಿದ್ದಾರೆ. ಹೆಚ್ಚು ಫಸಲು ಬಂದಾಗ ಭಾಲ್ಕಿ, ಬೀದರ, ಲಾತುರ ಸೇರಿ ಇತರ ಮಾರುಕಟ್ಟೆಗೆ ರವಾನೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ನುಗ್ಗೆ ಸೊಪ್ಪು, ನುಗ್ಗೆ ಬೀಜ ಮಾರಾಟದ ಬಗ್ಗೆಯೂ ಅವರು ಆಸಕ್ತಿ ಹೊಂದಿದ್ದಾರೆ.