ಬೀದರ್: ‘ಯಾರು ಕೂಡ ಅನುಮತಿ ಇಲ್ಲದೆ ಪಟಾಕಿ ಮಳಿಗೆಗಳನ್ನು ನಡೆಸುವಂತಿಲ್ಲ. ಒಂದುವೇಳೆ ನಿಯಮ ಉಲ್ಲಂಘಿಸಿ ಮಳಿಗೆ ತೆರೆದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪಟಾಕಿ ಮಳಿಗೆಗಳಿಗೆ ಅನುಮತಿ ಕೊಡುವ ವಿಚಾರಕ್ಕೆ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೀಪಾವಳಿ ಹಬ್ಬದ ಅಂಗವಾಗಿ ತಾತ್ಕಾಲಿಕವಾಗಿ ಪಟಾಕಿ ಮಳಿಗೆಗಳನ್ನು ಹಾಕುವ ಮಾಲೀಕರು ಮುಂಚಿತವಾಗಿ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು. ಶಾಶ್ವತವಾಗಿ ಮಳಿಗೆಗಳನ್ನು ನಡೆಸುವವರು ಕಡ್ಡಾಯವಾಗಿ ಅನುಮತಿ ಹೊಂದಿರಬೇಕು. ಯಾರ ಪರವಾನಗಿ ಅವಧಿ ಮುಗಿದಿದೆಯೋ ಅಂತಹವರು ನವೀಕರಿಸಿಕೊಳ್ಳಬೇಕು ಎಂದು ಸೂಚಿಸಿದರು.
ತಾತ್ಕಾಲಿಕ ಪರವಾನಗಿಗಾಗಿ ಅರ್ಜಿ ಸಲ್ಲಿಸಿ ಮಳಿಗೆಗಳನ್ನು ತೆರೆಯುವ ಸ್ಥಳಕ್ಕೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅಗ್ನಿ ಶಾಮಕ ದಳ ಹಾಗೂ ನಗರಸಭೆಯ ಅಧಿಕಾರಿಗಳು ಜಂಟಿ ಭೇಟಿ ನೀಡಿ ಪರಿಶೀಲಿಸಿ ಮೂರು ದಿನಗಳ ಒಳಗೆ ಎನ್ಒಸಿ ನೀಡಬೇಕು. ಈ ಹಿಂದಿನಿಂದ ಜಿಲ್ಲೆಯಾದ್ಯಂತ ನಡೆಸಲಾಗುತ್ತಿರುವ ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅವರ ಪರವಾನಗಿ ಪರಿಶೀಲಿಸಬೇಕು. ಅವರು ಕೈಗೊಂಡಿ ರುವ ಸುರಕ್ಷತಾ ಕ್ರಮ ಪರಿಶೀಲಿಸಿ ದೃಢೀಕರಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, ಯಾರು ಕೂಡ ಪರವಾನಗಿ ಇಲ್ಲದೆ ಪಟಾಕಿ ಮಾರಾಟ ಮಾಡುವಂತಿಲ್ಲ. ಪಟಾಕಿ ಅಂಗಡಿ ಹೊರತುಪಡಿಸಿ ಇತರೆ ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡುವುದು ಅಪರಾಧ ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಪಟಾಕಿ ಮಾರಾಟದ ಪರವಾನಗಿ ಇಲ್ಲದೆ ಇರುವುದು ಕಂಡು ಬಂದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಸ್ಥಳ ಪರಿಶೀಲನೆ ನಡೆಸದೆ ಎನ್ಒಸಿ ನೀಡಬಾರದು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ, ಅಗ್ನಿ ಶಾಮಕ ದಳದ ಅಧಿಕಾರಿ, ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಹಾಜರಿದ್ದರು.