ಔರಾದ: ಔರಾದ ಹಾಗೂ ಕಮಲನಗರ ತಾಲ್ಲೂಕು ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತೀವ್ರ ಸಮಸ್ಯೆಯಿರುವ ಗ್ರಾಮಗಳಿಗೆ ತುರ್ತಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಔರಾದ(ಬಿ) ತಾಲ್ಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಮಾರ್ಚ್ 4ರಂದು ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳ ಗ್ರಾಮ ಪಂಚಾಯಿತಿವಾರು ಎಲ್ಲ ಗ್ರಾಮಗಳಲ್ಲಿರುವ ಕುಡಿಯುವ ನೀರು ಪೂರೈಕೆಯ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ವಿವರಣೆ ಪಡೆದ ಶಾಸಕರು, ಸದ್ಯಕ್ಕೆ ಎಲ್ಲೆಲ್ಲಿ ನೀರಿನ ತೀವ್ರ ಸಮಸ್ಯೆಯಿದೆ ಅಂತಹ ಗ್ರಾಮಗಳಲ್ಲಿ ತ್ವರಿತವಾಗಿ ನೀರು ಪೂರೈಸಲು ಮುಂದಾಗಬೇಕು. ಬೇಸಿಗೆ ತೀವ್ರತೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಅಂತಹ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಹೇಳಿದರು.
ಸ್ಥಳೀಯವಾಗಿಯೇ ನೀರಿನ ವ್ಯವಸ್ಥೆ ಮಾಡಿದಲ್ಲಿ ಅನುಕೂಲವಾಗುತ್ತದೆ. ಇಲ್ಲವಾದಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಬೇಸಿಗೆ ಮುಗಿಯುವ ವರೆಗೆ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತುರ್ತು ಸಂದರ್ಭಗಳನ್ನು ಹೊರತುಪಡಿಸಿ ರಜೆ ಪಡೆಯಬಾರದು. ಈ ಅವಧಿಯಲ್ಲಿ ಇನ್ನಷ್ಟು ಚುರುಕಿನಿಂದ ಕೆಲಸ ಮಾಡಬೇಕು. ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಮೊಬೈಲ್ ಫೋನ್ಗಳನ್ನು ಚಾಲ್ತಿಯಲ್ಲಿಟ್ಟುಕೊಳ್ಳಬೇಕು. ಜನರ ಕರೆಗಳಿಗೆ ಉತ್ತರಿಸಬೇಕು. ಕ್ಷೇತ್ರದ ಯಾವೊಂದು ಗ್ರಾಮದಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ವಡಗಾಂವ, ಜೀರ್ಗಾ, ಚಟ್ನಾಳ್, ಬೇಲೂರ(ಎನ್), ಮಹಾರಾಜವಾಡಿ, ಎಕಲಾರ ತಾಂಡಾ, ಮುತಖೇಡ್, ಹೊಕ್ರಾಣಾ ಸೇರಿದಂತೆ ನೀರಿನ ಸಮಸ್ಯೆಯಿರುವ ಎಲ್ಲ ಗ್ರಾಮಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ಸಮನ್ವಯತೆಯೊಂದಿಗೆ ಸಮಸ್ಯೆ ಇತ್ಯರ್ಥಪಡಿಸಬೇಕು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಡ ಮುತುವರ್ಜಿ ವಹಿಸಬೇಕೆಂದು ಶಾಸಕರು ತಿಳಿಸಿದರು.
ಬಾದಲಗಾಂವ್ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಜಲ ಜೀವನ್ ಮಿನಷ್ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಾಹಿತಿ ನೀಡಿದಾಗ ಅಧಿಕಾರಿಗಳ ಮೇಲೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸುಭಾಷ ಅವರ ವಿರುದ್ಧ ಕೋಪಗೊಂಡ ಶಾಸಕರು, ಕ್ಷೇತ್ರದಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಮೊತ್ತದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಎಲ್ಲ ಕೆಲಸಗಳನ್ನು ಸರಿಯಾಗಿ ಮತ್ತು ಕಾಲಾವಧಿಯೊಳಗಾಗಿ ಪೂರ್ಣಗೊಳಿಸಬೇಕು. ಸಮರ್ಪಕವಾಗಿ ಕೆಲಸ ಮಾಡದ ಗುತ್ತಿಗೆದಾರರ ವಿರುದ್ಧ ಮುಲಾಜಿಲ್ಲದೇ ಶಿಸ್ತು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ತಮ್ಮ ವಿರುದ್ಧವೇ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಜೆಜೆಎಂ ಕೆಲಸ ಸಮರ್ಪಕವಾಗಿ ಆದಲ್ಲಿ ಮಾತ್ರ ಕಾಮಗಾರಿಯನ್ನು ಅಧೀನಕ್ಕೆ ಪಡೆಯಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಕಮಲನಗರ ಸ್ವಚ್ಛಗೊಳಿಸಿ: ಕಮಲನಗರ ದಿನೇ ದಿನೇ ಬೃಹತ್ತಾಗಿ ಬೆಳೆಯುತ್ತಿದೆ. ಆದರೆ ಎಲ್ಲಾ ಕಡೆ ಅಶುಚಿತ್ವ ಎದ್ದು ಕಾಣುತ್ತಿದೆ. ಯುವಕರು ಪ್ರತಿದಿನ ದೂರವಾಣಿ ಮುಖಾಂತರ ಕರೆ ಮಾಡಿ ದೂರುಗಳನ್ನು ಹೇಳುತ್ತಿದ್ದಾರೆ. ಆದರೂ ತಾವೇನು ಮಾಡುತ್ತಿದ್ದೀರಿ ಎಂದು ಕಮಲನಗರ ಇಓ ಮಾಣಿಕರಾವ ಪಾಟೀಲ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 20 ದಿನಗಳ ಕಾಲಾವಕಾಶ ನೀಡುತ್ತಿದ್ದು, ನಂತರ ನಾನು ಖುದ್ದಾಗಿ ಭೇಟಿ ನೀಡಿ ವೀಕ್ಷಿಸುತ್ತೇನೆ. ಅಲ್ಲಿವರೆಗೆ ಸಂಪೂರ್ಣ ಕಮಲನಗರವನ್ನು ಸ್ವಚ್ಛಗೊಳಿಸಬೇಕು. ಇಲ್ಲವಾದಲ್ಲಿ ಸುಮ್ಮನೆ ಬಿಡುವುದಿಲ್ಲವೆಂದು ಕಟುವಾಗಿ ಎಚ್ಚರಿಸಿದರು.
ಮುಖ್ಯಾಧಿಕಾರಿಯ ಬಗ್ಗೆ ಬೇಸರ: ಸಭೆಗೆ ಆಗಮಿಸದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯ ವಿರುದ್ಧ ತೀವ್ರ ಬೇಸರ ವ್ಯಕ್ತಪಡಿಸಿದ ಶಾಸಕರು, ಔರಾದ(ಬಿ) ಪಟ್ಟಣದಲ್ಲಿ ನೀರು ಸರಬರಾಜು ಕುರಿತು ಸಾಕಷ್ಟು ದೂರುಗಳು ಬರುತ್ತಿವೆ. ಕಲುಷಿತ ನೀರು ಸರಬರಾಜು ಆಗುತ್ತಿರುವ ಕಾರಣ ಅನಾರೋಗ್ಯ ಸಮಸ್ಯೆಗಳಾಗುವ ಸಾಧ್ಯತೆಗಳಿರುತ್ತವೆ. ಇದನ್ನು ಸರಿಪಡಿಸಿಕೊಂಡು ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಔರಾದ(ಬಿ) ಪಟ್ಟಣದಲ್ಲಿ ಅಮರೇಶ್ವರ ಜಾತ್ರಾ ಮಹೋತ್ಸವ ಜರುಗಲಿದ್ದು, ಇಡೀ ಪಟ್ಟಣವನ್ನು ಸ್ವಚ್ಛಗೊಳಿಸಬೇಕು. ಎಲ್ಲ ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಬೇಕೆಂದು ಸೂಚಿಸಿದರು.
ಸಭೆಯಲ್ಲಿ ಔರಾದ(ಬಿ) ಎಪಿಎಂಸಿ ಅಧ್ಯಕ್ಷರಾದ ಧೊಂಡಿಬಾ ನರೋಟೆ, ಔರಾದ(ಬಿ) ತಹಸೀಲ್ದಾರ ನಾಗಯ್ಯ ಹಿರೇಮಠ, ಕಮಲನಗರ ತಹಸೀಲ್ದಾರ ಅಮಿತಕುಮಾರ ಕುಲಕರ್ಣಿ, ಔರಾದ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ಕಮಲನಗರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣೀಕರಾವ ಪಾಟೀಲ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸುಭಾಷ.ಡಿ, ಜೆಸ್ಕಾಂನ ರವಿ ಕಾರಬಾರಿ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಅಧಿಕಾರಿಗಳು ಹಾಗೂ ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.