ಬೀದರ್: ಬೀದರ್ ವಿಧಾನಸಭಾ ಕ್ಷೇತ್ರದ ಎಲ್ಲೆಡೆ ಕಾಂಗ್ರೆಸ್ ಪರ ಅಲೆ ಇದೆ. ತಮ್ಮ ಗೆಲುವು ಖಚಿತವಾಗಿದೆ ಎಂದು ಬೀದರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಹೀಂಖಾನ್ ಹೇಳಿದರು.
ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಗೊಂಡ(ಕುರುಬ) ಸಮಾಜದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಜನ ಸ್ವಾಗತಿಸಿ ಬರಮಾಡಿಕೊಳ್ಳುತ್ತಿದ್ದಾರೆ. ಇದು, ಕಾಂಗ್ರೆಸ್ ಪಕ್ಷದ ಬಗೆಗಿನ ಜನರ ಒಲವಿಗೆ ನಿದರ್ಶನವಾಗಿದೆ ಎಂದು ಹೇಳಿದರು.
ಗುತ್ತಿಗೆ, ವರ್ಗಾವಣೆ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ, ದುರಾಡಳಿತದ ಕಾರಣ ಜನ ಬಿಜೆಪಿ ಕುರಿತು ಬೇಸೆತ್ತು ಹೋಗಿದ್ದಾರೆ. ಹಿಂದಿನ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿವಿಧ ಯೋಜನೆಗಳ ಮೂಲಕ ಸರ್ವ ಸಮುದಾಯಗಳ ಹಿತ ಕಾಪಾಡಿದ್ದನ್ನು ಸ್ಮರಿಸಿಕೊಳ್ಳುತ್ತಿದ್ದಾರೆ ಎಂದರು.
ಶಾಸಕನಾಗಿ ಬೀದರ್ ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಸಾರಿಗೆ ಸಂಪರ್ಕ, ಮೂಲಸೌಕರ್ಯ ವೃದ್ಧಿ ಸೇರಿದಂತೆ ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಇನ್ನೂ ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಳ್ಳಲು ಯೋಜಿಸಿದ್ದೇನೆ. ರಾಜ್ಯ, ಬೀದರ್ ಜಿಲ್ಲೆ ಹಾಗೂ ಬೀದರ್ ಕ್ಷೇತ್ರದ ಹಿತಕ್ಕಾಗಿ ಮತದಾರರು ಕಾಂಗ್ರೆಸ್ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಮುಖಂಡರಾದ ಮಲ್ಲಿಕಾರ್ಜುನ ಬಿರಾದಾರ, ಬಸವರಾಜ ಮಾಳಗೆ ಮತ್ತಿತರರು ಇದ್ದರು.
ಪಾದಯಾತ್ರೆ:
ಶಾಸಕ ರಹೀಂಖಾನ್ ಅವರು ಗಾದಗಿ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ, ಮನೆ ಮನೆಗೆ ತೆರಳಿ ಮತಯಾಚಿಸಿದರು. ಗ್ರಾಮದ ಮುಖಂಡರು, ನೂರಾರು ಕಾರ್ಯಕರ್ತರು ಇದ್ದರು.