ಬಸವಕಲ್ಯಾಣ: ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರಾಥಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದಿಂದ ಫೆಬ್ರುವರಿ 10 ರಂದು ಸಾವಿತ್ರಿಬಾಯಿ ಫುಲೆ ಜಯಂತಿ, ತಾಲ್ಲೂಕು ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಂಬಣ್ಣ ಘಾಂಗ್ರೆ ತಿಳಿಸಿದ್ದಾರೆ.
ನಗರದ ಬಸವೇಶ್ವರ ವೃತ್ತದಲ್ಲಿನ ಅಭಿವೃದ್ಧಿ ಮಂಡಳಿಯ ಭವನದಲ್ಲಿ ಅಂದು ಬೆಳಿಗ್ಗೆ 10.30 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಶರಣು ಸಲಗರ ಉದ್ಘಾಟಿಸುವರು. ವಾಣಿಜ್ಯ ತೆರಿಗೆ ಇಲಾಖೆ ಉಪ ವಿಭಾಗಾಧಿಕಾರಿ ಚೇತನಾ ಬಾವಗಿ ಭಾವಚಿತ್ರದ ಪೂಜೆ ನೆರವೇರಿಸುವರು. ಗೋಕುಳ ಹರಿಓಂ ಶಿಕ್ಷಣ ಸಂಸ್ಥೆ ಅಧ್ಯಕ್ಷ ದಿಲೀಪಗಿರಿ ಗೋಸಾಯಿ ವಿಶೇಷ ಉಪನ್ಯಾಸ ನೀಡುವರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಗೌಡ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಪ್ರಭಾಕರ ಕಳಮಾಸೆ ಅವರಿಗೆ ವಿಶೇಷ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಬಿಸಿಯೂಟ ಅಧಿಕಾರಿ ಸಂಜೀವಕುಮಾರ ಕಾಂಗೆ, ಬ್ಯಾಂಕ್ ಅಧಿಕಾರಿ ಅಮರ ಬಾವಗಿ ಮತ್ತಿತರರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ 20 ಶಿಕ್ಷಕರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ, 11 ಶಾಲೆಗಳಿಗೆ ಉತ್ತಮ ಸರ್ಕಾರಿ ಶಾಲೆ ಪ್ರಶಸ್ತಿ, 10 ಶಿಕ್ಷಕ ದಂಪತಿಗಳಿಗೆ ಸಾವಿತ್ರಿಬಾಯಿ ಜ್ಯೋತಿಬಾ ಫುಲೆ ಆದರ್ಶ ದಂಪತಿ ಪ್ರಶಸ್ತಿ, 15 ಜನರಿಗೆ ಜ್ಯೋತಿಬಾ ಫುಲೆ ಪ್ರಶಸ್ತಿ, 6 ಜನರಿಗೆ ಆರೋಗ್ಯ ಮತ್ತು ಶೈಕ್ಷಣಿಕ ಸೇವೆ ಪ್ರಶಸ್ತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಕಾರ್ಯಕ್ರಮಕ್ಕೆ ಹಾಜರಾಗುವ ತಾಲ್ಲೂಕಿನ ಎಲ್ಲ ಮುಖ್ಯ ಶಿಕ್ಷಕರಿಗೆ ಹಾಗೂ ಇತರೆ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಒಒಡಿ ಸೌಲಭ್ಯ ಒದಗಿಸಿದ್ದಾರೆ ಎಂದು ಸಹ ಅವರು ತಿಳಿಸಿದ್ದಾರೆ.