ಬೀದರ್: ‘ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಅವರ ಹೆಸರು ಆಡಿಯೊದಲ್ಲಿ ಉಲ್ಲೇಖಿಸಿದ್ದಾನೆ. ಅದೇ ಬಹಳ ದೊಡ್ಡ ಸಾಕ್ಷಿ. ಹಾಗಾಗಿ ಕೂಡಲೇ ಸಚಿವರನ್ನು ಬಂಧಿಸಬೇಕು’ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಆಗ್ರಹಿಸಿದರು.
ನಗರ ಹಾಗೂ ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ ಸಮೀಪದ ಬೀದರ್ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ‘ಸಿಪೆಟ್’ ತಾತ್ಕಾಲಿಕ ಕೇಂದ್ರ ಉದ್ಘಾಟಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.
ಆತ್ಮಹತ್ಯೆಗೂ ಮುನ್ನ ಮೂರು ಆಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಅದರಲ್ಲಿ ಸಚಿವ ಶರಣಪ್ರಕಾಶ ಪಾಟೀಲರೇ ನೇರ ಕಾರಣ ಎಂದು ಹೇಳಿದ್ದಾನೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಈ ಕುರಿತು ಸಿ.ಎಂ.ಗೂ ಮನವಿ ಮಾಡಿದ್ದೇನೆ ಎಂದರು.
ಕಾಂಗ್ರೆಸ್ ನಾಯಕರು ಪ್ರಭಾವ ಬೀರಿ ಸಾಕ್ಷಿ ತಿರುಚಿದ್ದಾರೆ. ಮೃತ ವ್ಯಕ್ತಿಯ ಮನೆಯವರಿಗೆ ಆಸೆ ಆಮಿಷಗಳನ್ನು ಒಡ್ಡಿದ್ದಾರೆ. ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಲು ಹೊರಟಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಕುತಂತ್ರ ಬುದ್ಧಿ. ಈ ರೀತಿಯ ಘಟನೆಗಳು ನಡೆದಾಗ ಶಾಸಕರು, ಮಂತ್ರಿಗಳನ್ನು ಉಳಿಸಲು ಪ್ರಭಾವ ಬೀರುವುದು ನೋಡಿದ್ದೇವೆ. ಈ ಪ್ರಕರಣದಲ್ಲೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಪ್ರಭಾವ ಬೀರುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.