ಬೀದರ್: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಕೇಳಿ ಬಂದಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿ, ಅನಂತರ ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.
‘ಕಟ್ಟಡ ಕಾರ್ಮಿಕರ ಸತತ ಹೋರಾಟದಿಂದ ರಾಜ್ಯದಲ್ಲಿ 2007ರಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲಾಗಿದೆ. ಕಾಮಗಾರಿ ಮುಗಿದ ನಂತರ ಮಂಡಳಿಗೆ ಸೆಸ್ ಬರುತ್ತದೆ. ಕಾರ್ಮಿಕರು ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಣಿಗೆ, ನವೀಕರಣಕ್ಕೆ ವಂತಿಗೆ ತುಂಬುತ್ತಾರೆ. ₹13 ಸಾವಿರ ಕೋಟಿ ಹಣ ಸಂಗ್ರಹವಾಗಿತ್ತು. ಹಿಂದಿನ ಬಿಜೆಪಿ ಸರ್ಕಾರವು ಮಂಡಳಿಯ ಹಣವನ್ನು ಲೂಟಿ ಮಾಡಿದೆ’ ಎಂದು ಆರೋಪಿಸಿದರು.
‘ಲ್ಯಾಪ್ಟಾಪ್ ಖರೀದಿ ಮತ್ತು ಆರೋಗ್ಯ ತಪಾಸಣೆ ಹೆಸರಿನಲ್ಲಿ ಹಿಂದಿನ ಸರ್ಕಾರ ಕೋಟಿ-ಕೋಟಿ ಹಣ ಲೂಟಿ ಮಾಡಿದೆ. ಆರೋಗ್ಯ ತಪಾಸಣೆ ನೆಪದಲ್ಲಿ ಒಬ್ಬ ಕಾರ್ಮಿಕನಿಗೆ ₹2850 ದುಂದು ವೆಚ್ಚ ಮಾಡಲಾಗಿದೆ. ಪ್ರತಿ ಜಿಲ್ಲೆಗೆ 33,000 ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನೆಪದಲ್ಲಿ ಪ್ರತಿ ಜಿಲ್ಲೆಯಲ್ಲಿ ₹9.40 ಕೋಟಿ ಖರ್ಚು ಮಾಡಲಾಗಿದೆ. ಆದರೆ, ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ ಕೊಡಲಿಲ್ಲ. ಹಾಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಇದರ ತಪಾಸಣೆಗೆ ಮುಂದಾಗಬೇಕು. ಇದನ್ನು ಸಿಒಡಿಯಿಂದ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.