ಕಲಬುರಗಿ: ರಾಜ್ಯವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಇಂದು ನಸುಕಿನ ಜಾವ 5 ಗಂಟೆಗೆ ಡಿಸಿಪಿ ಆಡೂರು ಶ್ರೀನಿವಾಸಲು ನೇತೃತ್ವದಲ್ಲಿ ಪೊಲೀಸ್ ತಂಡ ದಾಳಿ ನಡೆಸಿತು.
ಜೈಲಿನಿಂದ ಕೈದಿಗಳು ಮೊಬೈಲ್ ಕರೆ ಮಾಡಿ ಬೆದರಿಕೆ ಹಾಕುವ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಆರ್.ಚೇತನ್ ಮಾರ್ಗದರ್ಶನದಲ್ಲಿ ಡಿಸಿಪಿ ನೇತೃತ್ವದ 120 ಪೊಲೀಸರು ವ್ಯಾಪಕ ಶೋಧ ನಡೆಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ಜೈಲಿನ ಮೂಲೆ ಮೂಲೆ, ಪ್ರತಿ ಸೆಲ್ ಜಾಲಾಡಿದ್ದಾರೆ.
ದಾಳಿಯಲ್ಲಿ ಯಾವುದೇ ಅಕ್ರಮ ವಸ್ತುಗಳು ಪತ್ತೆಯಾಗಿಲ್ಲ. ಈ ಹಿಂದೆ ಜೈಲಿನ ಆವರಣದಲ್ಲಿ ಪತ್ತೆಯಾಗಿದ್ದ ಅನೇಕ ಮೊಬೈಲ್ ಫೋನ್ಗಳ ಕುರಿತು ಫರಹತಾಬಾದ ಪೊಲೀಸ್ ಠಾಣೆಯಲ್ಲಿ 10 ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ಡಾ ರಂಗನಾಥ್ ತಿಳಿಸಿದ್ದಾರೆ.