ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ಪಿನ್ ದಿವ್ಯಾ ಹಾಗರಗಿಯನ್ನು ಇಂದು ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ಸಿಐಡಿ ಕಸ್ಟಡಿಯ ಕಾಲವಕಾಶವು ಮುಕ್ತಾಯವಾದ ಹಿನ್ನೆಲೆಯಲ್ಲಿ ದಿವ್ಯಾಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ನಂತರ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕಳಿಸಲಾಗುತ್ತದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ, 18 ದಿನಗಳ ನಂತರ ಮಹಾರಾಷ್ಟ್ರದ ಪುಣೆಯಲ್ಲಿ ಬಂಧನಕ್ಕೊಳಗಾಗಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹೆಚ್ಚಿನ ವಿಚಾರಣೆಗಾಗಿ 11 ದಿನ ಸಿಐಡಿ ಕಸ್ಟಡಿಗೆ ನೀಡಲಾಗಿತ್ತು.
ಅಗತ್ಯ ವಿಚಾರಣೆ ನಡೆಸಿದ ಸಿಐಡಿ ತಂಡ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆ ಎಂದು ಜೈಲಿಗೆ ಕಳಿಸಲಿದ್ದಾರೆ.
ದಿವ್ಯಾ ಹಾಗರಗಿಯ ಬಹುತೇಕ ವಿಚಾರಣೆ ಮುಕ್ತಾಯವಾದ ಹಿನ್ನೆಲೆ ಮತ್ತೆ ಸಿಐಡಿ ಕಸ್ಟಡಿಗೆ ಪಡೆಯುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗುತ್ತಿದೆ.
11 ದಿನ ಸುದಿರ್ಘ ವಿಚಾರಣೆ ನಡೆಸಿದ ಸಿಐಡಿ ತಂಡ ಅನೇಕ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನಿನ್ನೆಯಷ್ಟೇ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಶಾಲೆ, ಹಳೆ ಜೇವರ್ಗಿ ರಸ್ತೆಯಲ್ಲಿರುವ ಮನೆ ಸ್ಥಳ ಮಹಜರ್ ಮಾಡಿದ್ದಾರೆ. ಶಾಲೆಯಲ್ಲಿ ಜೆರಾಕ್ಸ್ ಮಶೀನ್ ಸೇರಿದಂತೆ ಕೆಲ ಎಲೆಕ್ಟ್ರಾನಿಕ್ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.