ಕಲಬುರಗಿ: ಜಿಲ್ಲೆಯಲ್ಲಿ ಇಸ್ರೇಲ್ ಮಾದರಿ ಕೃಷಿ ಬಳಕೆ ನಿಟ್ಟಿನಲ್ಲಿ ಇಸ್ರೇಲ್ ದೇಶದ ದಕ್ಷಿಣ ಭಾರತದ ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಅವರನ್ನು ತಾವು ಸಂಪರ್ಕಿಸಿದ್ದು, ಶೀಘ್ರದಲ್ಲಿಯೇ ಅವರ ನೇತೃತ್ವದ ತಂಡ ಕಲಬುರಗಿಗೆ ಬಂದು ಅಧ್ಯಯನ ಮಾಡಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದರು.
ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿರುವ ಹಾನಿ ಮತ್ತು ಕೈಗೊಂಡ ಪರಿಹಾರ ಕ್ರಮಗಳು ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಕಲಬುರಗಿ ವಿಜನ್-2050 ಭಾಗವಾಗಿ ಕಲಬುರಗಿ ಜಿಲ್ಲೆಯ ಮಣ್ಣಿನ ಗುಣಮಟ್ಟ, ಇಲ್ಲಿನ ಹವಾಗುಣ ಮತ್ತು ನೀರಿನ ಲಭ್ಯತೆ ಕುರಿತು ಅಧ್ಯಯನ ಮಾಡಿ ಅಗತ್ಯ ಸಲಹೆ ನೀಡಲು ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಅವರನ್ನು ಸಂಪರ್ಕಿಸಿದಾಗ ಅವರು ಹಿಂದುಳಿದ ಈ ಪ್ರದೇಶಕ್ಕೆ ತಾವೇ ಖುದ್ದಾಗಿ ಬರಲು ಉತ್ಸುಕರಾಗಿದ್ದಾರೆ. ಹೀಗಾಗಿ, ಅವರ ಪ್ರವಾಸದ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಅವರೊಂದಿಗೆ ಇಡೀ ಜಿಲ್ಲೆ ಸಂಚರಿಸಿ ಅಧ್ಯಯನಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವ ಮುರುಗೇಶ ನಿರಾಣಿ ನಿರ್ದೇಶಿಸಿದರು.
ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ 2 ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮತ್ತು ನಗರ ಪ್ರದೇಶದಲ್ಲಿ 1 ಲಕ್ಷ ಸೇರಿದಂತೆ ರಾಜ್ಯದಾದ್ಯಂತ ವಿವಿಧ ವಸತಿ ಯೋಜನೆ ಅಡಿಯಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಿ ಸೂರಿಲ್ಲದವರಿಗೆ ಸೂರು ಕಲ್ಪಿಸುವ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹದಿಂದ ಬಾಧಿತ ಗ್ರಾಮಗಳ ಗ್ರಾಮಸ್ಥರಿಗೆ ಶಾಶ್ವತ ವಸತಿ ಕಲ್ಪಿಸಲು ಕೂಡಲೇ ಸರ್ವೆ ಮಾಡಿ ಪಟ್ಟಿ ನೀಡಬೇಕು ಎಂದರು.
ಸಭೆಯ ಚರ್ಚೆಯಲ್ಲಿ ಭಾಗವಹಿಸಿದ ಶಾಸಕ ಎಂ.ವೈ.ಪಾಟೀಲ ಅವರು ಮಾತನಾಡಿ ಕಲಬುರಗಿ ಹೈಕೋರ್ಟ್ನಿಂದ ಹೂಸೂರು ಕಲ್ಪಿಸುವ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ರಸ್ತೆ ಮೇಲೆ ಮಳೆ ನೀರು ನಿಂತು ಕೆಟ್ಟು ಹೋಗಿದ್ದು, ಕೂಡಲೆ ಸುಧಾರಣೆ ಮಾಡಬೇಕು ಎಂದು ಸಚಿವರಲ್ಲಿ ಕೋರಿದರು. ಇದಕ್ಕೆ ಸ್ಪಂದಿಸಿದ ಸಚಿವರು ರಾಷ್ಟ್ರೀಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕೂಡಲೆ ಪರಿಶೀಲಿಸಿ ಅಂದಾಜು ಪಟ್ಟಿ ಸಲ್ಲಿಸಬೇಕು ಎಂದರು.
ಮುಂಗಾರು ಚುರುಕುಗೊಂಡ ಕಾರಣ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರಸಗೊಬ್ಬರ ಕೊರತೆಯಾದರೆ ನನ್ನ ಗಮನಕ್ಕೆ ತನ್ನಿ ಎಂದು ಸಚಿವರು ಜಂಟಿ ಕೃಷಿ ನಿದೇಶಕರಿಗೆ ಸೂಚಿಸಿದರು.