ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಮಕ್ಕಳ ಸಹಾಯವಾಣಿ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳ ನೆರವಿನೊಂದಿಗೆ ಕಲಬರಗಿಯಲ್ಲಿ ಸೋಮವಾರ ಹಾಗೂ ಮಂಗಳವಾರ ಬಾಲಕಾರ್ಮಿಕ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿದ್ದ 16 ಮಕ್ಕಳು ಹಾಗೂ ಐವರು ಮಹಿಳೆಯರನ್ನು ರಕ್ಷಿಸಲಾಗಿದೆ.
ಭಿಕ್ಷಾಟನೆಯು ಹೆಚ್ಚಿದ್ದರ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇದನ್ನು ತಡೆಯಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಸಂಬಂಧ ಜಿಲ್ಲಾಡಳಿತ ಮಕ್ಕಳ ರಕ್ಷಣಾ ಕಾರ್ಯವನ್ನು ಚುರುಕುಗೊಳಿಸಿದೆ.
‘ಭಿಕ್ಷಾಟನೆಯು ಸಾಮಾಜಿಕ ಪಿಡುಗಾಗಿದ್ದು, ತಡೆಗಟ್ಟುವ ಜೊತೆಗೆ ಮಕ್ಕಳನ್ನು ರಕ್ಷಿಸುವ ಕಾರ್ಯಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮುಂದಾಗಿದೆ. ಅದನ್ನು ಎಲ್ಲರೂ ಸೇರಿ ಹೋಗಲಾಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ 16 ಮಕ್ಕಳನ್ನು, ಐವರು ಮಹಿಳೆಯರನ್ನು ರಕ್ಷಿಸಿ ಪುನರ್ವಸತಿ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಎದುರು ಹಾಜರುಪಡಿಸಿ, ಮಕ್ಕಳನ್ನು ಬಾಲ ನ್ಯಾಯ ಕಾಯ್ದೆಯ ಅಡಿ ನೋಂದಾಯಿತ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರುನ್ನುಮ್ ಅವರು ತಿಳಿಸಿದ್ದಾರೆ.
ನಗರದ ಪ್ರಮುಖ ಸ್ಥಳಗಳಲ್ಲಿ ಮಕ್ಕಳೊಂದಿಗೆ ಭಿಕ್ಷೆ ಬೇಡುತ್ತಿದ್ದ ಹಲವರಿಗೆ ಭಿಕ್ಷಾಟನೆ ಕಾನೂನು ಬಾಹಿರ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳ ವಿ.ಪಾಟೀಲ್ ತಿಳಿಸಿದ್ದಾರೆ.
‘ಮುಂದಿನ ದಿನದಲ್ಲಿ ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಮುಖಾಂತರ ನಗರದ ಪ್ರಮುಖ ಸ್ಥಳಗಳಲ್ಲಿ ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸುವುದಾಗಿ’ ಮಹಿಳಾ ಮತ್ತು ಮಕ್ಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನವೀನ್ ಕುಮಾರ್ ಅವರು ತಿಳಿಸಿದ್ದಾರೆ.
ಭಿಕ್ಷಾಟನೆಯಲ್ಲಿ ಮಕ್ಕಳು ಕಂಡು ಬಂದಲ್ಲಿ ಮಕ್ಕಳ ಉಚಿತ ಸಹಾಯವಾಣಿ 1098 ಗೆ ಅಥವಾ 112ಕ್ಕೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದು ಕಲಬುರಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಚಂದ್ರಕಾಂತ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗೌರಿಶಂಕರ್ ಜಮಾದರ್, ಸತೀಶ್, ಸುಮಂಗಲಾ ನಡಗೇರಿ, ಅರುಣಾ, ಮಕ್ಕಳ ಸಹಾಯವಾಣಿ ತಂಡದ ಸಂಯೋಜಕರಾದ ಬಸವರಾಜ್ ತೆಂಗಳಿ, ಅಶೋಕ್, ರಾಜು, ಕನ್ಯಾಕುಮಾರಿ, ಮಲ್ಲಯ್ಯ ಗುತ್ತೆದಾರ್, ಮರಳಮ್ಮ, ಸಂತೋಷ, ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ರಾಕೇಶ್ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.