ಕಲಬುರಗಿ(ಬೀದರ್): ತೆಲಂಗಾಣದಿಂದ ವಿಮಾನದ ಮೂಲಕ ಕಲಬುರಗಿಗೆ ಬಂದಿಳಿಯುವ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ನಗರದ ಪೊಲೀಸ್ ಪರೇಡ್ ಮೈದಾನಕ್ಕೆ ಬರಲಿದ್ದಾರೆ. ಅಲ್ಲಿಂದ ಸುಮಾರು 3 ಕಿ.ಮೀ. ದೂರವಿರುವ ಎನ್.ವಿ. ಮೈದಾನದವರೆಗೆ ರೋಡ್ಶೋ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
2019ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಬಂದಿದ್ದ ಹಾಲಿ ಸಂಸದ ಡಾ. ಉಮೇಶ ಜಾಧವ ಪರವಾಗಿ ಅದ್ಧೂರಿ ಪ್ರಚಾರವನ್ನು ಕಲಬುರಗಿಯಲ್ಲಿ ಮಾಡಿದ್ದರು. ಎರಡನೇ ಬಾರಿ ಜಾಧವ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದ್ದು, ಅವರ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಿಂದ 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರನ್ನು ಸೇರಿಸುವ ಗುರಿಯನ್ನು ಬಿಜೆಪಿ ಇಟ್ಟುಕೊಂಡಿದೆ.
ವೇದಿಕೆಯಲ್ಲಿ ಪ್ರಧಾನಿ ಅವರೊಂದಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಡಾ. ಉಮೇಶ ಜಾಧವ ಸೇರಿದಂತೆ ಕಲಬುರಗಿ, ಬೀದರ್ ಜಿಲ್ಲೆಗಳ ಬಿಜೆಪಿ ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ.