ಕಲಬುರಗಿ: ಜಿಲ್ಲೆಯಾದ್ಯಂತ ಕಳೆದ ಜೂನ್, ಆಗಸ್ಟ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ತೊಗರಿ ಬೆಳೆ ಶೇ.60ಕ್ಕಿಂತ ಅಧಿಕ ಇಳುವರಿ ನಷ್ಟ ಸಂಭವಿಸಿರುವ ಹಿನ್ನೆಲೆಯಲ್ಲಿ ತೊಗರಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಶೇ.25ರಷ್ಟು ಮಧ್ಯಂತರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಗುರುವಾರ ಜಿಲ್ಲಾಧಿಕಾರಿ ಬಿ.ಫೌಜಿಯ್ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ನಿರ್ಧರಿಸಿದೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಕುರಿತಂತೆ ಚರ್ಚಿಸಿ ಇದಕ್ಕೆ ಪೂರಕವಾಗಿ ಮುಂದಿನ ಮೂರು ದಿನಗಳಲ್ಲಿ ಕೃಷಿ, ಕಂದಾಯ, ತೋಟಗಾರಿಕೆ ಹಾಗೂ ವಿಮಾ ಕಂಪನಿಯ ಅಧಿಕಾರಿಗಳು ಜಂಟಿಯಾಗಿ ಜಿಲ್ಲೆಯಾದ್ಯಂತ ತೊಗರಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ಸಮೀಕ್ಷೆ ಮಾಡುವಾಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ 10 ರಂತೆ ಬೆಳೆ ಪ್ರದೇಶಗಳನ್ನು ರ್ಯಾಂಡಮ್ ಆಗಿ ಪ್ರಯೋಗಕ್ಕೆ ಒಳಪಡಿಸಬೇಕು. ಪಾರದರ್ಶಕವಾಗಿ ಮತ್ತು ನಿಖರವಾಗಿ ಬೆಳೆ ಸಮೀಕ್ಷೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ DC ಖಡಕ್ ಸೂಚನೆ ನೀಡಿದರು.