ಕಲಬುರಗಿ: ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿ ಕೈಗೆತ್ತಿಕೊಂಡ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಜಿಲ್ಲೆಯ ಪಂಚಾಯತರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮೋನಪ್ಪ ಸೇರಿದಂತೆ ಮೂವರು ಎಂಜಿನಿಯರ್ಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಅಮಾನತು ಮಾಡಿದೆ.
2020-21ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹10 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಸೇಡಂ ತಾಲ್ಲೂಕಿನ ಬಿಬ್ಬಳ್ಳಿ ಗ್ರಾಮದ ಚರಂಡಿ ನಿರ್ಮಾಣ, ಸೇಡಂ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಿಂದ ಉಡಗಿಯವರೆಗಿನ ರಸ್ತೆ ಅಭಿವೃದ್ಧಿ ಹಾಗೂ ಸೇಡಂ ಮುಖ್ಯ ರಸ್ತೆಯಿಂದ ಆಡಕಿ ಗ್ರಾಮದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು.
ಹೀಗಾಗಿ, ಪಿಆರ್ಇ ವಿಭಾಗದ ಇಇ ಮೋನಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹನುಮಪ್ಪ ಅಡವಣಿ, ಸೇಡಂ ಉಪವಿಭಾಗದ ಕಿರಿಯ ಎಂಜಿನಿಯರ್ ಮಿರಾಜುದ್ದೀನ್ ಪಟೇಲ್ ಅವರನ್ನು ಅಮಾನತುಗೊಳಿಸಲಾಗಿದೆ.