ಕಲಬುರಗಿ, ನ.1: ಇತ್ತೀಚಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಬ್ಲೂಟೂಥ್ ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಅವಶ್ಯವೆನಿಸಿದರೆ ಉನ್ನತಮಟ್ಟದ ತನಿಖೆ ನಡೆಸಲು ಕೂಡಾ ಸರ್ಕಾರ ಸಿದ್ದವಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಬುಧವಾರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾರದರ್ಶಕ ಹಾಗೂ ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಅಗತ್ಯ ಮತ್ತು ಸೂಕ್ತ ಕ್ರಮಕೈಗೊಳ್ಳಲಾಗಿತ್ತು. ಹ್ಯಾಂಡ್ ಹೆಲ್ಡ್ ಡಿಟೆಕ್ಟರ್ ಹಾಗೂ ಮೆಟಲ್ ಡಿಟೆಕ್ಟರ್ ಬಳಸಲಾಗಿತ್ತು. ಆದರೂ ಕೂಡಾ ಕೆಲವೊಬ್ಬ ಅಭ್ಯರ್ಥಿಗಳು ಶರ್ಟ್ ಗಳಲ್ಲಿ ಡಿವೈಸ್ ಇಟ್ಟುಕೊಂಡು ಪರೀಕ್ಷಾ ಕೇಂದ್ರಗಳಿಗೆ ಹೋಗಿದ್ದರು.
ಈ ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಅಂತವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ ನಂತರ ಬ್ಲೂಟೂಥ್ ಬಳಸಿ ಪರೀಕ್ಷೆಗಳಲ್ಲಿ ಉತ್ತರ ಬರೆಯುತ್ತಿದ್ದವನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದು ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ತಕ್ಷಣ ಅಗತ್ಯ ಕ್ರಮ ವಹಿಸಿದ್ದರಿಂದ ಪ್ರಕರಣ ಕೂಡಲೇ ಬೆಳಕಿಗೆ ಬಂದಿದೆ ಎಂದರು.
ಅಕ್ರಮದಲ್ಲಿ ಹಿರಿಯ ಅಧಿಕಾರಿಯೊಬ್ಬರು ಭಾಗಿಯಾಗಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿದ್ದರೂ ಕೂಡಾ ಅಂತವರನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸದೇ ಬಿಡುವುದಿಲ್ಲ ಎಂದರು.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಒತ್ತಾಯಿಸುತ್ತಿರುವ ಕುರಿತು ಕುರಿತು ಮಾತನಾಡಿ, ಪ್ರಕರಣದ ತನಿಖೆಯನ್ನು ಪೊಲೀಸರು ಸಮಗ್ರವಾಗಿ ಕೈಗೊಳ್ಳುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಶ್ರಮಿಸುತ್ತಿದ್ದಾರೆ. ಅಗತ್ಯ ಬಿದ್ದರೆ ಉನ್ನತ ಮಟ್ಟದ ತನಿಖೆ ಕೈಗೊಳ್ಳಲಾಗುವುದು. ಆದರೆ ಸಿಬಿಐಗೆ ವಹಿಸಲ್ಲ ಎಂದು ಸ್ಪಷ್ಟಪಡಿಸಿ, ಪಿಎಸ್ ಐ ಹಗರಣವನ್ನು ಬಿಜೆಪಿ ಯಾಕೆ ಸಿಬಿಐಗೆ ವಹಿಸಿರಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲ ಬಿದ್ದಿದೆ. ಬರ ಪರಿಹಾರವಾಗಿ ಸುಮಾರು 17,000 ಕೋಟಿ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆ ಕಾರ್ಯದರ್ಶಿಗಳನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿ ಮಾಡಿ ಬಂದಿದ್ದೇವೆ. ಈಗಿರುವ ಎನ್ ಡಿ ಆರ್ ಎಫ್ ನಿಯಮದ ಪ್ರಕಾರ ಪರಿಹಾರ ಬಿಡುಗಡೆ ಮಾಡಿದರೆ ಹೆಚ್ಚಿನ ಪರಿಹಾರ ಲಭಿಸುವುದಿಲ್ಲ ಹಾಗಾಗಿ ಎನ್ ಡಿ ಆರ್ ಎಫ್ ನಿಯಮಾವಳಿಗಳಿಗೆ ಅಗತ್ಯ ಬದಲಾವಣೆ ತರುವಂತೆ ಒತ್ತಾಯಿಸಿ ಸಿಎಂ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೂ ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್ ನಿಯಮದ ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಲಿದೆ ಎಂದರು.
ಕೇಂದ್ರದಿಂದ ನರೇಗಾ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಬರಬೇಕಾದ ಕೂಲಿ ರೂ 700 ಕೋಟಿ ಬಿಡುಗಡೆ ಮಾಡುವಂತೆ ಈಗಾಗಲೇ ಪತ್ರ ಬರೆಯಲಾಗಿದೆ. ಅದಲ್ಲದೇ ಈಗಿರುವ 100 ದಿನಗಳ ಮಾನವ ದಿನಗಳನ್ನು 150 ಕ್ಕೇರಿಸಲು ಬೇಡಿಕೆ ಇದೆ. ಇದನ್ನು ಕೇಂದ್ರ ಸರ್ಕಾರವೇ ಮಾಡಬೇಕು. ರಾಜ್ಯದ ವಾರ್ಷಿಕ ಮಿತಿ 13 ಕೋಟಿ ಮಾನವದಿನಗಳಿದ್ದು ಈಗಾಗಲೇ 10 ಕೋಟಿ ಮಾನವ ದಿನ ಸೃಜನೆಯಾಗಿದೆ. ಬರಗಾಲವಿರುವುದರಿಂದ 13 ಕೋಟಿಗೆ ಬದಲು 18 ಕೋಟಿ ಮಾನವ ದಿನ ಹೆಚ್ಚಿಸುವಂತೆ ಬೇಡಿಕೆ ಸಲ್ಲಿಸಲಾಗಿದೆ. ಆದರೆಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬದಲಿಗೆ, ವಾರ್ಷಿಕ ರೂ 75,000 ಕೋಟಿ ಬಜೆಟ್ ಬದಲಿಗೆ ರೂ 60,000 ಕೋಟಿಗೆ ಇಳಿಸಲಾಗಿದೆ. ಹೀಗಾದರೆ ಬಡವರು ಹೇಗೆ ಬದುಕಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಯ ಗುತ್ತಿಗೆಯನ್ನು ಎಲ್ ಅಂಡ್ ಟಿ ಕಂಪನಿಗೆ ವಹಿಸಲಾಗಿದ್ದು ಕಂಪನಿ ಕಳಪೆ ಗುಣಮಟ್ಟದ ಪೈಪ್ ಗಳನ್ನು ಬಳಸುತ್ತಿದೆ ಎಂದು ಪತ್ರಕರ್ತರು ಗಮನ ಸೆಳೆದಾಗ ಸೆಪೆಟ್ ಅನುಮೋದಿತ ಪೈಪ್ ಗಳನ್ನು ಬಳಕೆ ಮಾಡಲು ಸೂಚಿಸಲಾಗಿದೆ. ಅವಶ್ಯವೆನಿಸಿದರೆ ಥರ್ಡ್ ಪಾರ್ಟಿ ಪರಿಶೀಲನೆ ನಡೆಸಲಾಗುವುದು ಎಂದರು.
ರಾಜ್ಯದಲ್ಲಿ ಈ ಹಿಂದಿನ ಸರ್ಕಾರ ವಿದ್ಯುತ್ ಉತ್ಪಾದನೆಗೆ ಒತ್ತುಕೊಡದೆ ಇರುವುದರಿಂದ ಈಗ ಬೇಡಿಕೆ ಹೆಚ್ಚಾಗಿದೆ. ಹಾಗಾಗಿ ಉತ್ತರಪ್ರದೇಶ ಹಾಗೂ ಪಂಜಾಬ್ ನಿಂದ ವಿದ್ಯುತ್ ಖರೀದಿ ಹಾಗೂ ಛತ್ತಿಸ್ ಗಡ್ ನಿಂದ ಕಲ್ಲಿದ್ದಲು ಖರೀದಿ ಮಾಡಲು ಸರ್ಕಾರ ಮುಂದಾಗಿದೆ ಎಂದರು.