ಕೊಪ್ಪಳ, ಆ.1: ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಅವರು ಇಂದು ಅಂಜನಾದ್ರಿ ಬೆಟ್ಟದ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿ ಕೆಳಕಂಡ ಸೂಚನೆಗಳನ್ನು ನೀಡಿದರು.
ಅಂಜನಾದ್ರಿ ಬೆಟ್ಟದ ಕ್ಷೇತ್ರಕ್ಕೆ ಯಾತ್ರಿಕರು ಅವರಿಗೆ ವಸತಿ ಹಾಗೂ ಇತರ ಸೌಲಭ್ಯಗಳನ್ನು ಪೂರೈಸಬೇಕು. 100 ಕೋಟಿ ರೂ. ವೆಚ್ಚದಲ್ಲಿ 600 ಕೊಠಡಿಗಳ ಯಾತ್ರಿನಿವಾಸ, ಆಸ್ಪತ್ರೆ, ಶೌಚಾಲಯಗಳ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು.
ಈ ಉದ್ದೇಶಕ್ಕಾಗಿ ವಾಸ್ತುಶಿಲ್ಪಿಗಳನ್ನು ನೇಮಿಸಿಕೊಂಡು 2 ತಿಂಗಳ ಅವಧಿಯಲ್ಲಿ ಕಾಮಗಾರಿಯ ವಿನ್ಯಾಸವನ್ನು ಸಿದ್ಧಪಡಿಸಿ, ಅನುಮೋದನೆಯನ್ನು ಪಡೆದುಕೊಳ್ಳಬೇಕು.
ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗೆ ಕ್ರಮ ತೆಗೆದುಕೊಂಡು ಈ ಬಗ್ಗೆ ಸ್ಥೂಲವಾದ ವರದಿಯನ್ನು ಸಲ್ಲಿಸಬೇಕು. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆಗೆ 24 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಅನುದಾನವನ್ನೂ ನೀಡಲಾಗುವುದು.
ವಾಹನ ನಿಲುಗಡೆ ವ್ಯವಸ್ಥೆಗೆ ಕನಿಷ್ಟ 35 ಎಕರೆ ಪ್ರದೇಶ ಅಗತ್ಯವಿದ್ದು, ಮೊದಲನೇ ಹಂತದಲ್ಲಿ ಕನಿಷ್ಟ 20 ಎಕರೆ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು.
ಈ ಯೋಜನೆಯಡಿಯಲ್ಲಿ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಸ್ವಚ್ಛತೆಗಾಗಿ ಎಲ್ಲ ಕ್ರಮ ಕೈಗೊಳ್ಳಬೇಕು.
ಈ ಕ್ಷೇತ್ರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಹಳಷ್ಟು ಧಾರ್ಮಿಕ ಕ್ಷೇತ್ರಗಳಲ್ಲಿ ಯಾತ್ರಿ ನಿವಾಸಗಳನ್ನು ನಿರ್ಮಿಸಲಾಗಿದ್ದರೂ, ನಿರ್ವಹಣೆ ಇರುವುದಿಲ್ಲ. ಮೊದಲ ದಿನದಿಂದಲೇ ನಿರ್ವಹಣೆ ಹಾಗೂ ಸ್ವಚ್ಛತಾ ಸೇವೆಯನ್ನು ಏಜೆನ್ಸಿಯಿಂದ ಪಡೆಯಬಹುದಾಗಿದೆ.
ರಾಷ್ಟ್ರೀಯ ಹೆದ್ದಾರಿಯಿಂದ ಹಾಗೂ ಗಂಗಾವತಿಯಿಂದ ಸಂಪರ್ಕ ಕಲ್ಪಿಸಬಹುದಾಗಿದ್ದು, ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವುದು. ಯಾತ್ರಿನಿವಾಸದ ನಿರ್ಮಾಣದ ಜೊತೆಜೊತೆಯಲ್ಲಿಯೇ ರಸ್ತೆ ನಿರ್ಮಾಣ ಕಾಮಗಾರಿಯೂ 7-8 ತಿಂಗಳಲ್ಲಿ ಪೂರ್ಣಗೊಳ್ಳಬೇಕು.
ಅಂಜನಾದ್ರಿ ಕ್ಷೇತ್ರಕ್ಕೆ ಯಾತ್ರಿಕರ ಭೇಟಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಮುಂದಿನ ಎರಡು ತಿಂಗಲ್ಲಿ ಭೂ ಸ್ವಾಧೀನ ಕಾರ್ಯಗಳು ಮುಗಿದು, 2 ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ನಾಲ್ಕು ತಿಂಗಳೊಳಗೆ ನಿರ್ಮಾಣ ಕಾಮಗಾರಿ ಪ್ರಾರಂಭವಾಗಬೇಕು. ಕಾಮಗಾರಿಗೆ ವೇಳಾಪಟ್ಟಿಯನ್ನು ನಿಗದಿಪಡಿಸಿ ಅದರಂತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.